ಬೆಂಗಳೂರು: ಕೇಂದ್ರ ಸರ್ಕಾರ ಬಿಎಂಟಿಸಿಗೆ ಬರೋಬ್ಬರಿ 4,500 ಎಲೆಕ್ಟ್ರಿಕ್ ಬಸ್ಗಳನ್ನು ಮಂಜೂರು ಮಾಡಿದ್ದರೂ ರಾಜ್ಯ ಸರ್ಕಾರ ಅನುದಾನ ನೀಡುತ್ತಿಲ್ಲ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಆರೋಪಿಸಿದ್ದಾರೆ.
ಬೆಂಗಳೂರಿನ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಲಪಡಿಸಲು ಕೇಂದ್ರ ಸರ್ಕಾರವು ಬಿಎಂಟಿಸಿಗೆ ಬರೋಬ್ಬರಿ 4,500 ಎಲೆಕ್ಟ್ರಿಕ್ ಬಸ್ಗಳನ್ನು ಮಂಜೂರು ಮಾಡಿದೆ. ಆದರೆ, ರಾಜ್ಯ ಕಾಂಗ್ರೆಸ್ ಸರ್ಕಾರವು ಈ ಬಸ್ಗಳ ನಿಯೋಜನೆಗೆ ಅಗತ್ಯವಿರುವ ಕ್ಯಾಬಿನೆಟ್ ಅನುಮೋದನೆಯನ್ನು ನೀಡದೆ ಉದಾಸೀನತೆ ತೋರುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಸ್ಗಳನ್ನು ಪಡೆದುಕೊಳ್ಳಲು ರಾಜ್ಯ ಸರ್ಕಾರ ತನ್ನ ಪಾಲಿನ ಅತ್ಯಲ್ಪ ಮೊತ್ತದ ಹಣವನ್ನು ಹೂಡಿಕೆ ಮಾಡಬೇಕಿದೆ. ಆದರೆ, ಸಾರ್ವಜನಿಕ ಹಿತಾಸಕ್ತಿಯ ಈ ಯೋಜನೆಗೆ ಒಪ್ಪಿಗೆ ನೀಡಲು ಸರ್ಕಾರ ಹಿಂದೇಟು ಹಾಕುತ್ತಿದೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ತೇಜಸ್ವಿ ಸೂರ್ಯ, ಈ ಬಸ್ಸುಗಳ ವಿಳಂಬದ ಕುರಿತು ನಾನು ಈಗಾಗಲೇ ಸಂಸತ್ತಿನಲ್ಲಿ ಧ್ವನಿ ಎತ್ತಿದ್ದು, ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಅವರು ಸಹ ಇದಕ್ಕೆ ಪೂರಕವಾಗಿ ಉತ್ತರಿಸಿದ್ದಾರೆ. ಈ ಸರ್ಕಾರದ ಬಳಿ 1,300 ಕಿಲೋಮೀಟರ್ ಹಾಗೂ ಕೇವಲ ಐಷಾರಾಮಿ ಕಾರುಗಳ ಸಂಚಾರಕ್ಕಾಗಿ 2 ಕಿಲೋಮೀಟರ್ ಉದ್ದದ ಟನಲ್ ರಸ್ತೆಗಳಂತಹ ವಿಐಪಿ ಯೋಜನೆಗಳಿಗೆ ಸಾವಿರಾರು ಕೋಟಿ ರೂಪಾಯಿ ಖರ್ಚು ಮಾಡಲು ಹಣವಿದೆ. ಆದರೆ, ದಿನನಿತ್ಯ ಬಿಎಂಟಿಸಿ ಬಸ್ ಹಾಗೂ ನಮ್ಮ ಮೆಟ್ರೋದಲ್ಲಿ ಪ್ರಯಾಣಿಸುವ ಸಾಮಾನ್ಯ ಜನರಿಗಾಗಿ ಖರ್ಚು ಮಾಡಲು ಹಣವಿಲ್ಲವೇ? ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ಸರ್ಕಾರದ ದೃಷ್ಟಿಯಲ್ಲಿ ಸಾಮಾನ್ಯ ನಾಗರಿಕರು ಎರಡನೇ ದರ್ಜೆಯ ಪ್ರಜೆಗಳಾಗಿದ್ದಾರೆ. ಇವರಿಗೆ ಪ್ರತಿದಿನ ಬಸ್ನಲ್ಲಿ ಓಡಾಡುವ ಮಹಿಳೆಯರಾಗಲಿ, ಪಾದಚಾರಿಗಳಾಗಲಿ ಆದ್ಯತೆಯಾಗಿ ಉಳಿದಿಲ್ಲ. ಕಮಿಷನ್ ದಂಡು ಹೊಡೆಯಬಹುದಾದ ‘ಬಿಳಿ ಆನೆ’ಯಂತಹ ದೊಡ್ಡ ಯೋಜನೆಗಳ ಬೆನ್ನತ್ತಿರುವ ವಿಐಪಿ ಸರ್ಕಾರ ಇದಾಗಿದೆ ಎಂದು ಟೀಕಿಸಿದರು.
ಇದೇ ವೇಳೆ, ಬೆಂಗಳೂರಿನ ಸ್ಥಳೀಯ ಮೂಲಸೌಕರ್ಯಗಳ ಕುರಿತು ಮಾತನಾಡಿದ ತೇಜಸ್ವಿ ಸೂರ್ಯ, ಬನಶಂಕರಿ ಬಿಎಂಟಿಸಿ ಬಸ್ ನಿಲ್ದಾಣದ ಬಳಿ ಸಾರ್ವಜನಿಕರು ಮತ್ತು ಪಾದಚಾರಿಗಳ ಅನುಕೂಲಕ್ಕಾಗಿ ಸ್ಕೈವಾಕ್ (ಪಾದಚಾರಿ ಮೇಲ್ಸೇತುವೆ) ನಿರ್ಮಾಣ ಮಾಡಲು ಅಂದು ಉಪಮುಖ್ಯಮಂತ್ರಿಯಾಗಿದ್ದ ಡಿ.ಕೆ. ಶಿವಕುಮಾರ್ ಅವರೇ ಸ್ವತಃ ಗುದ್ದಲಿ ಪೂಜೆ ನೆರವೇರಿಸಿದ್ದರು. ಆದರೆ, ಈಗ ಆ ಕಾಮಗಾರಿಯನ್ನು ಅರ್ಧಕ್ಕೆ ನಿಲ್ಲಿಸಲಾಗಿದೆ. ಯಾರೋ ಒಬ್ಬ ಗುತ್ತಿಗೆದಾರನ ಮಾತು ಕೇಳಿ, ಲಾಭದ ಉದ್ದೇಶದಿಂದ ಇಲ್ಲೊಂದು ಫ್ಲೈ ಓವರ್ ಮಾಡಲು ಸರ್ಕಾರ ಹೊರಟಿದೆ ಎಂದು ಕಿಡಿಕಾರಿದರು.