ಅಸ್ಸಾಂ: ಪ್ರಕೃತಿಯ ಮುಂದೆ ಮನುಷ್ಯ ಎಷ್ಟೇ ಬಲಿಷ್ಠನಾದರೂ ಅಸಹಾಯಕನೇ ಎಂಬುದಕ್ಕೆ ಮತ್ತೊಂದು ಉದಾಹರಣೆ ಅಸ್ಸಾಂನಲ್ಲಿ ಕಂಡುಬಂದಿದೆ. ಭಾರೀ ಮಳೆ ಹಾಗೂ ಪ್ರವಾಹದ ಅಬ್ಬರಕ್ಕೆ ಇಡೀ ರಾಜ್ಯ ತತ್ತರಿಸಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಪ್ರಕೃತಿಯ ಮುನಿಸಿಗೆ ನೂರಾರು ಗ್ರಾಮಗಳು ನೀರಿನಲ್ಲಿ ಮುಳುಗಿದ್ದು, ಸಾವಿರಾರು ಕುಟುಂಬಗಳು ಮನೆ ಕಳೆದುಕೊಂಡು ಪರಿಹಾರ ಶಿಬಿರಗಳತ್ತ ತೆರಳುವಂತಾಗಿದೆ. ಅಸ್ಸಾಂನ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಗಂಭೀರವಾಗಿದ್ದು, ಜನರು ಜೀವ ಉಳಿಸಿಕೊಳ್ಳಲು ಹೋರಾಟ ನಡೆಸುತ್ತಿದ್ದಾರೆ. ಅಸ್ಸಾಂ ರಾಜ್ಯದಲ್ಲಿ ಭಾರೀ ಮಳೆ ಮತ್ತು ಪ್ರವಾಹದ ಅಬ್ಬರ ಮುಂದುವರಿದಿದ್ದು, ಪರಿಸ್ಥಿತಿ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದೆ. ಪ್ರವಾಹ ಸಂಬಂಧಿತ ಘಟನೆಗಳಲ್ಲಿ ಇದುವರೆಗೆ 95 ಮಂದಿ ಮೃತಪಟ್ಟಿದ್ದು, 1.6 ಲಕ್ಷಕ್ಕೂ ಹೆಚ್ಚು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ರಾಜ್ಯದ 563 ಗ್ರಾಮಗಳು ಸಂಪೂರ್ಣವಾಗಿ ಜಲಾವೃತವಾಗಿವೆ. ಶಿವಸಾಗರ್ ಜಿಲ್ಲೆಯಲ್ಲಿ ಪರಿಸ್ಥಿತಿ ಅತ್ಯಂತ ಆತಂಕಕಾರಿಯಾಗಿದ್ದು, 57 ಸಾವಿರಕ್ಕೂ ಹೆಚ್ಚು ಜನರು ನಿರಾಶ್ರಿತರಾಗಿದ್ದಾರೆ. ಗೋಲಾಘಾಟ್ ಜಿಲ್ಲೆಯಲ್ಲಿ 34 ಸಾವಿರ ಹಾಗೂ ಜೋರ್ಹಾಟ್ ಜಿಲ್ಲೆಯಲ್ಲಿ 25 ಸಾವಿರಕ್ಕೂ ಹೆಚ್ಚು ಜನರು ಪ್ರವಾಹದಿಂದ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ಪ್ರವಾಹದ ತೀವ್ರತೆಯನ್ನು ಗಮನಿಸಿ ರಾಜ್ಯದ 14 ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ರಾಜಧಾನಿ ಗುವಾಹಟಿಯ ಹಲವು ಪ್ರದೇಶಗಳೂ ನೀರಿನಲ್ಲಿ ಮುಳುಗಿವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ.ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ತೀವ್ರಗೊಳಿಸಲಾಗಿದೆ. ಸಂತ್ರಸ್ತರಿಗಾಗಿ 45 ಪರಿಹಾರ ಶಿಬಿರಗಳನ್ನು ತೆರೆಯಲಾಗಿದ್ದು, 12,300ಕ್ಕೂ ಹೆಚ್ಚು ಜನರು ಅಲ್ಲಿ ಆಶ್ರಯ ಪಡೆದಿದ್ದಾರೆ.
ಇದರ ಜೊತೆಗೆ, 32 ಸಾವಿರಕ್ಕೂ ಹೆಚ್ಚು ಸಂತ್ರಸ್ತರಿಗೆ ಅಕ್ಕಿ, ಉಪ್ಪು, ಬೇಳೆ ಸೇರಿದಂತೆ ಅಗತ್ಯ ದಿನಸಿ ಸಾಮಗ್ರಿಗಳನ್ನು ವಿತರಿಸಲು 59 ವಿತರಣಾ ಕೇಂದ್ರಗಳನ್ನು ಆರಂಭಿಸಲಾಗಿದೆ. ಇದೇ ವೇಳೆ, ಅಸ್ಸಾಂನ ಪ್ರವಾಹ ಪರಿಸ್ಥಿತಿಯನ್ನು ಪ್ರಧಾನಿ ನರೇಂದ್ರ ಮೋದಿ ನಿರಂತರವಾಗಿ ಪರಿಶೀಲಿಸುತ್ತಿದ್ದು, ಕೇಂದ್ರ ಸರ್ಕಾರದಿಂದ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.