ಕೋಲ್ಕತ್ತಾ : ಬುಧವಾರ ಕೋಲ್ಕತ್ತಾದ ತಾರತಲಾ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಗೋದಾಮಿನ ಮೇಲ್ಛಾವಣಿ ಕುಸಿದು ಹಲವು ಕಾರ್ಮಿಕರು ಒಳಗೆ ಸಿಲುಕಿರುವ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಲ್ಲಿದ್ದ ಸುಮಾರು 60 ಮಂದಿ ಕಾರ್ಮಿಕರು ಸ್ಥಳದಲ್ಲಿದ್ದರು ಎಂದು ವರದಿಯಾಗಿದ್ದು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಕೆಲವರು ಮೇಲ್ಮಹಡಿಗಳಿಂದ ಕಾಂಕ್ರೀಟ್ ಹಾಕುವ ಕೆಲಸ ಮಾಡುತ್ತಿದ್ದಾಗಲೇ ಈ ದುರಂತ ಸಂಭವಿಸಿದೆ.ಸ್ಥಳೀಯರ ಪ್ರಕಾರ, ಭಾರೀ ಶಬ್ದ ಕೇಳಿ ಸ್ಥಳೀಯರು ಓಡಿ ಬಂದಾಗ ಗೋದಾಮಿನ ಮೇಲ್ಛಾವಣಿ ಸಂಪೂರ್ಣವಾಗಿ ಕುಸಿದಿರುವುದು ಕಂಡುಬಂದಿತು. ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಲಾಯಿತು.
ಪೊಲೀಸರು ಹಾಗೂ ವಿಪತ್ತು ನಿರ್ವಹಣಾ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಕಬ್ಬಿಣದ ರಚನೆಗಳನ್ನು ಗ್ಯಾಸ್ ಕಟರ್ಗಳ ಮೂಲಕ ಕತ್ತರಿಸಿ ಅವಶೇಷಗಳಡಿ ಸಿಲುಕಿದ ಕಾರ್ಮಿಕರನ್ನು ಹೊರತೆಗೆದುಕೊಳ್ಳುವ ಕಾರ್ಯ ನಡೆಯುತ್ತಿದೆ. ಸೇನಾ ಸಿಬ್ಬಂದಿಯೂ ಸಹ ರಕ್ಷಣಾ ಕಾರ್ಯದಲ್ಲಿ ನೆರವಾಗಿದ್ದಾರೆ. ಕ್ರೇನ್ಗಳನ್ನು ಬಳಸಿ ಕಬ್ಬಿಣದ ಕಂಬಗಳನ್ನು ತೆರವುಗೊಳಿಸಲಾಗುತ್ತಿದೆ.
ಬಿಜೆಪಿ ನಾಯಕ ರಾಕೇಶ್ ಸಿಂಗ್ ಸ್ಥಳಕ್ಕೆ ಭೇಟಿ ನೀಡಿ, “ನಿಯಮಾನುಸಾರ ನಿರ್ಮಾಣ ಕಾರ್ಯ ನಡೆದಿಲ್ಲ. ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು” ಎಂದು ಹೇಳಿದ್ದಾರೆ.ನಗರಾಡಳಿತದ ಆಯುಕ್ತೆ ಸ್ಮಿತಾ ಪಾಂಡೆ ಹಾಗೂ ನಗರಾಭಿವೃದ್ಧಿ ಸಚಿವ ಅಗ್ನಿಮಿತ್ರ ಪಾಲ್ ಸೇರಿದಂತೆ ಕೋಲ್ಕತ್ತಾ ಮಹಾನಗರ ಪಾಲಿಕೆ ಅಧಿಕಾರಿಗಳು ಮತ್ತು ಇಂಜಿನಿಯರ್ಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಈವರೆಗೆ ಪೊಲೀಸ್ ಅಥವಾ ಆಡಳಿತದಿಂದ ಅಧಿಕೃತ ಹೇಳಿಕೆ ಹೊರಬಂದಿಲ್ಲ. ಆದರೆ ರಕ್ಷಣಾ ಕಾರ್ಯಾಚರಣೆಗೆ ಆದ್ಯತೆ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಜೊತೆಗೆ ಗೋದಾಮಿನ ಮಾಲೀಕ ಮತ್ತು ನಿರ್ಮಾಣ ಕಂಪನಿಯ ವಿರುದ್ಧ ತನಿಖೆ ಆರಂಭವಾಗಿದೆ. ಅವರನ್ನು ವಿಚಾರಣೆ ನಡೆಸುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ರಾಜ್ಯ ಸರ್ಕಾರ ನಬನ್ನಾ ರಾಜ್ಯ ಸಚಿವಾಲಯದಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಿದೆ. ಸಹಾಯವಾಣಿ ಸಂಖ್ಯೆಗಳು: 1070, 8697981070, 22143526 ಮತ್ತು 22535185.