ಜಾರ್ಖಂಡ್’ನ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ 20ನೇ ದಿನವೂ ಮುಂದುವರಿದಿದೆ.
ಜಾರ್ಖಂಡ್’ನ ರಾಂಚಿಯಲ್ಲಿ ಗುರುವಾರ ವಿಧಾನಸಭೆಯತ್ತ ಪ್ರತಿಭಟನಾ ಮೆರವಣಿಗೆ ನಡೆಸಲು ಮುಂದಾದ ಹಿನ್ನೆಲೆಯಲ್ಲಿ ಸುಮಾರು 600 ಮಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಎಫ್ಐಆರ್ನಲ್ಲಿ 100 ಪ್ರತಿಭಟನಾಕಾರರನ್ನು ಹೆಸರಿಸಲಾಗಿದ್ದು, ಮತ್ತೂ 500 ಮಂದಿ ಅಪರಿಚಿತ ವಿದ್ಯಾರ್ಥಿಗಳು ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.
ಪರೀಕ್ಷಾ ಅಕ್ರಮಗಳ ವಿರುದ್ಧ ಹೋರಾಟ ನಡೆಸುತ್ತಿರುವ ವಿದ್ಯಾರ್ಥಿಗಳು, ತಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸುವವರೆಗೂ ಪ್ರತಿಭಟನೆ ಮುಂದುವರಿಸುವುದಾಗಿ ಹೇಳಿದ್ದಾರೆ.
ಮುಖ್ಯಮಂತ್ರಿ ನಿವಾಸದ ಸುತ್ತ ಬ್ಯಾರಿಕೇಡ್
ಪ್ರತಿಭಟನಾ ಮೆರವಣಿಗೆಗೂ ಮುನ್ನ ರಾಂಚಿ ನಗರದಾದ್ಯಂತ ಮುಳ್ಳುತಂತಿ ಸೇರಿದಂತೆ ಬಿಗಿ ಬ್ಯಾರಿಕೇಡ್ಗಳನ್ನು ಹಾಕಲಾಗಿತ್ತು. ಇದೀಗ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ನಿವಾಸದ ಸುತ್ತಲೂ ಮುಳ್ಳುತಂತಿ ಅಳವಡಿಸಿ ಸಂಚಾರ ನಿರ್ಬಂಧಿಸಲಾಗಿದೆ ಎಂದು ಕೇಂದ್ರ ಸಚಿವ ಸಂಜಯ್ ಸೇಠ್ ಆರೋಪಿಸಿದ್ದಾರೆ. ಪ್ರತಿಭಟನಾಕಾರರು ಮಾತನಾಡಿ, ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕುವ ಸಾಧ್ಯತೆ ಹಿನ್ನೆಲೆಯಲ್ಲಿ ಭದ್ರತೆ ಹೆಚ್ಚಿಸಲಾಗಿದೆ ಎಂಬ ಮಾಹಿತಿ ನಮಗೆ ದೊರೆತಿದೆ. ಆದರೆ, ಸದ್ಯ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕುವ ಯಾವುದೇ ಯೋಜನೆ ನಮಗಿಲ್ಲ. ಈ ಕುರಿತು ಹರಿದಾಡುತ್ತಿರುವ ಮಾಹಿತಿ ಸಂಪೂರ್ಣ ತಪ್ಪು ಮತ್ತು ದಾರಿ ತಪ್ಪಿಸುವಂತದ್ದು ಎಂದು ಸ್ಪಷ್ಟಪಡಿಸಿದ್ದಾರೆ.
ಏನಿದು ವಿದ್ಯಾರ್ಥಿಗಳ ಪ್ರತಿಭಟನೆ?
JPSC-JSSC Reforms Manch ನೇತೃತ್ವದಲ್ಲಿ ರಾಂಚಿಯ ಜೈಪಾಲ್ ಸಿಂಗ್ ಮುಂಡಾ ಕ್ರೀಡಾಂಗಣದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ನಡೆಯುತ್ತಿದೆ. ರಾಜ್ಯದ ನೇಮಕಾತಿ ಪ್ರಕ್ರಿಯೆಯಲ್ಲಿ ವ್ಯಾಪಕ ಬದಲಾವಣೆಗಳನ್ನು ತರಬೇಕು ಎಂಬುದು ವಿದ್ಯಾರ್ಥಿಗಳ ಪ್ರಮುಖ ಬೇಡಿಕೆಯಾಗಿದೆ.
ವಿದ್ಯಾರ್ಥಿಗಳ ಪ್ರಮುಖ ಬೇಡಿಕೆಗಳ
• ನೇಮಕಾತಿ ಪರೀಕ್ಷೆಗಳಲ್ಲಿ ಹೆಚ್ಚಿನ ಪಾರದರ್ಶಕತೆ ತರಬೇಕು.
• ಹಲವು ಪರೀಕ್ಷೆಗಳನ್ನು ರದ್ದುಗೊಳಿಸಬೇಕು.
• ಪರೀಕ್ಷಾ ಅಕ್ರಮಗಳ ಕುರಿತು CBI ತನಿಖೆ ನಡೆಸಬೇಕು ಅಥವಾ ಜಾರ್ಖಂಡ್ನ ಹೊರಗಿನ ನಿವೃತ್ತ ನ್ಯಾಯಾಧೀಶರ ಸಮಿತಿಯಿಂದ ಸ್ವತಂತ್ರ ತನಿಖೆ ನಡೆಸಬೇಕು.
ಸೋಮವಾರ ಪ್ರತಿಭಟನಾಕಾರರು ಜಾರ್ಖಂಡ್ ವಿಧಾನಸಭೆಯತ್ತ ಮೆರವಣಿಗೆ ನಡೆಸಲು ಮುಂದಾದಾಗ ಭದ್ರತಾ ಪಡೆಗಳು ಅವರನ್ನು ತಡೆದವು. ಈ ವೇಳೆ ಲಾಠಿಚಾರ್ಜ್, ಜಲಫಿರಂಗಿ ಮತ್ತು ಅಶ್ರುವಾಯು ಬಳಸಲಾಯಿತು.ಈ ಘಟನೆ ರಾಜಕೀಯ ವಿವಾದಕ್ಕೂ ಕಾರಣವಾಗಿದ್ದು, ಪೊಲೀಸ್ ಕ್ರಮವನ್ನು ಖಂಡಿಸಿ ಬಿಜೆಪಿ ರಾಜ್ಯಾದ್ಯಂತ ಬಂದ್ಗೆ ಕರೆ ನೀಡಿದೆ.ಬುಧವಾರ ಮಾಜಿ ಮುಖ್ಯಮಂತ್ರಿ ರಘುವರ್ ದಾಸ್ ಸರ್ಕಾರದ ವಿರುದ್ಧ ಒತ್ತಡ ಹೆಚ್ಚಿಸಿದ್ದು, ಏಳು ದಿನಗಳೊಳಗೆ CBI ತನಿಖೆಗೆ ಆದೇಶಿಸದಿದ್ದರೆ ತಾವು ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಹೇಳಿದ್ದಾರೆ.
ವಿದ್ಯಾರ್ಥಿಗಳ ಬೇಡಿಕೆಗಳಿಗೆ ಬೆಂಬಲ ಸೂಚಿಸಿ ದೇಶದ 1,200ಕ್ಕೂ ಹೆಚ್ಚು ವಿಶ್ವವಿದ್ಯಾಲಯಗಳಲ್ಲಿ ಪ್ರತಿಭಟನೆ ನಡೆಸುವುದಾಗಿ ABVP ಕೂಡ ಘೋಷಿಸಿದೆ.
ಇದಲ್ಲದೆ, 2024ರಲ್ಲಿ ಅಬಕಾರಿ ಕಾನ್ಸ್ಟೆಬಲ್ ನೇಮಕಾತಿಗಾಗಿ ನಡೆದ ದೈಹಿಕ ಪರೀಕ್ಷೆಯ ವೇಳೆ ಮೃತಪಟ್ಟ 19 ಮಂದಿಯ ಕುಟುಂಬಗಳಿಗೆ ತಲಾ ₹1 ಕೋಟಿ ಪರಿಹಾರ ನೀಡಬೇಕು ಎಂದು ರಘುವರ್ ದಾಸ್ ಆಗ್ರಹಿಸಿದ್ದಾರೆ. ಪರೀಕ್ಷಾ ಅಕ್ರಮಗಳ ಕುರಿತು ಜಾರ್ಖಂಡ್ ಸರ್ಕಾರ ರಚಿಸಿರುವ SIT ಬಗ್ಗೆಯೂ ಪ್ರಶ್ನೆಗಳು ಎದ್ದಿವೆ. ತನಿಖೆ ನಡೆಯುತ್ತಿರುವಾಗ ಸಮಿತಿಯ ರಚನೆಯಲ್ಲಿ ಬದಲಾವಣೆ ಮಾಡಿರುವುದನ್ನು ಉಲ್ಲೇಖಿಸಿರುವ ABVP ನಾಯಕರು, SITಯ ವಿಶ್ವಾಸಾರ್ಹತೆಯನ್ನೇ ಪ್ರಶ್ನಿಸಿದ್ದಾರೆ.