ಬೆಂಗಳೂರು: ಟ್ರಿನಿಟಿ ಮೆಟ್ರೋ ನಿಲ್ದಾಣದ ಸಮೀಪ ನಡೆಯುತ್ತಿದ್ದ ನಮ್ಮ ಮೆಟ್ರೋ ವಿದ್ಯುತ್ ದೀಪಗಳ ಅಳವಡಿಕೆ ಕಾಮಗಾರಿ ವೇಳೆ ವಿದ್ಯುತ್ ಶಾಕ್ ತಗುಲಿ ಮೃತಪಟ್ಟ ಗುತ್ತಿಗೆ ಕಾರ್ಮಿಕನ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಎಂಆರ್ಸಿಎಲ್ನ ನಾಲ್ವರು ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಸುರಕ್ಷತಾ ಕ್ರಮಗಳಲ್ಲಿನ ನಿರ್ಲಕ್ಷ್ಯ ಹಾಗೂ ಮೇಲ್ವಿಚಾರಣೆಯ ಕೊರತೆ ಕಂಡುಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಮೃತ ಕಾರ್ಮಿಕನನ್ನು ಗುರುಪ್ಪ (50) ಎಂದು ಗುರುತಿಸಲಾಗಿದೆ. ಅವರು ಎಂ.ಆರ್. ಎಲೆಕ್ಟ್ರಿಕಲ್ಸ್ ಸಂಸ್ಥೆಯ ಮೂಲಕ ಮೆಟ್ರೋ ಕಂಬಗಳಿಗೆ ಅಲಂಕಾರಿಕ ವಿದ್ಯುತ್ ದೀಪ ಅಳವಡಿಸುವ ಕಾಮಗಾರಿಯಲ್ಲಿ ತೊಡಗಿದ್ದರು. ಈ ವೇಳೆ ವಿದ್ಯುತ್ ಶಾಕ್ ತಗುಲಿದೆ ಎನ್ನಲಾಗಿದೆ.
ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ನಲ್ಲಿ ಬಿಎಂಆರ್ಸಿಎಲ್ನ ನಾಲ್ವರು ಅಧಿಕಾರಿಗಳು ಹಾಗೂ ಸಂಬಂಧಿತ ಗುತ್ತಿಗೆ ಸಂಸ್ಥೆಯ ವಿರುದ್ಧ ನಿರ್ಲಕ್ಷ್ಯದ ಆರೋಪ ಮಾಡಲಾಗಿದೆ. ಕಾರ್ಮಿಕರ ಸುರಕ್ಷತಾ ನಿಯಮಗಳನ್ನು ಸಮರ್ಪಕವಾಗಿ ಪಾಲಿಸಲಾಗಿತ್ತೇ, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಲಾಗಿತ್ತೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಘಟನೆ ಹೇಗೆ ನಡೆದಿದೆ?
ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ನೀಡಿರುವ ಮಾಹಿತಿ ಪ್ರಕಾರ, ಮಧ್ಯಾಹ್ನ ಸುಮಾರು 3:52 ಗಂಟೆಗೆ ಟ್ರಿನಿಟಿ ಮೆಟ್ರೋ ನಿಲ್ದಾಣದ ಪಿಲ್ಲರ್ ಸಂಖ್ಯೆ 153ರ ಬಳಿ ಈ ದುರ್ಘಟನೆ ನಡೆದಿದೆ. ಪಿಲ್ಲರ್ ಲೈಟಿಂಗ್ ಯೋಜನೆಯ ಭಾಗವಾಗಿ ಗುತ್ತಿಗೆದಾರ ಸಂಸ್ಥೆ ಎಂ/ಎಸ್ ಎಂ.ಆರ್. ಎಲೆಕ್ಟ್ರಿಕಲ್ಸ್ ವತಿಯಿಂದ ಅರ್ಥ್ ಪಿಟ್ (Earth Pit) ತೋಡುವ ಕಾಮಗಾರಿ ನಡೆಯುತ್ತಿತ್ತು. ಇದೇ ವೇಳೆ ಕಾರ್ಮಿಕರು ಆಕಸ್ಮಿಕವಾಗಿ ವಿದ್ಯುತ್ ಮೂಲದ ಸಂಪರ್ಕಕ್ಕೆ ಬಂದ ಪರಿಣಾಮ ವಿದ್ಯುತ್ ಸ್ಪರ್ಶಿಸಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಬಳಿಕ ಬಿಎಂಆರ್ಸಿಎಲ್ ಕೂಡ ಆಂತರಿಕ ತನಿಖೆಗೆ ಆದೇಶಿಸಿದ್ದು, ಅಪಘಾತಕ್ಕೆ ಕಾರಣವಾದ ಅಂಶಗಳನ್ನು ಪರಿಶೀಲಿಸಲಾಗುತ್ತಿದೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.