ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆ.ಎಸ್.ಆರ್.ಟಿ.ಸಿ) ಬಸ್ಗಳಲ್ಲಿ ಟಿಕೆಟ್ ಪಡೆಯದೇ ಪ್ರಯಾಣಿಸುವವರ ವಿರುದ್ಧ ಕೆ.ಎಸ್.ಆರ್.ಟಿ ಜಾಗೃತ ದಳ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಒಂದು ತಿಂಗಳಲ್ಲಿ 9 ಲಕ್ಷ ರೂಪಾಯಿ ದಂಡ ವಸೂಲಿ ಮಾಡಿದೆ.
ಕರ್ನಾಟಕ ಹಾಗೂ ನೆರೆಯ ರಾಜ್ಯಗಳಲ್ಲಿ ಸಂಚರಿಸುವ ಕೆ.ಎಸ್.ಆರ್.ಟಿ.ಸಿ ಬಸ್ಗಳಲ್ಲಿ ಜಾಗೃತ ದಳದ ಸಿಬ್ಬಂದಿ ನಡೆಸಿದ ತಪಾಸಣೆಯ ವೇಳೆ ಸಿಕ್ಕಿಬಿದ್ದ ಟಿಕೆಟ್ ರಹಿತ ಪ್ರಯಾಣಿಕರಿಂದ ಒಟ್ಟು 8.94 ಲಕ್ಷ ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ಸಂಸ್ಥೆಯ ಆದಾಯಕ್ಕೆ ನಷ್ಟ ಉಂಟುಮಾಡುವವರನ್ನು ಪತ್ತೆ ಹಚ್ಚಲು ಈ ವಿಶೇಷ ಕಾರ್ಯಾಚರಣೆ ನಡೆಸಲಾಗಿತ್ತು.
ಈ ಬಗ್ಗೆ ಕೆ.ಎಸ್.ಆರ್.ಟಿ.ಸಿ ಅಧಿಕೃತ ಮಾಹಿತಿ ಬಿಡುಗಡೆ ಮಾಡಿದೆ. ಈ ಒಂದು ತಿಂಗಳ ಸುದೀರ್ಘ ಕಾರ್ಯಾಚರಣೆಯಲ್ಲಿ ಜಾಗೃತ ದಳದ ತಂಡಗಳು ಒಟ್ಟು 42,518 ಬಸ್ಗಳನ್ನು ತಪಾಸಣೆಗೆ ಒಳಪಡಿಸಿವೆ. ಈ ವೇಳೆ 4,353 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದ್ದು, ಟಿಕೆಟ್ ರಹಿತವಾಗಿ ಪ್ರಯಾಣಿಸುತ್ತಿದ್ದ 4,476 ಪ್ರಯಾಣಿಕರಿಗೆ ದಂಡ ವಿಧಿಸಲಾಗಿದೆ.
ಈ ಕಾರ್ಯಾಚರಣೆಯಲ್ಲಿ ಸುಮಾರು 1.52 ಲಕ್ಷ ರೂಪಾಯಿ ಮೌಲ್ಯದ ಆದಾಯ ಸೋರಿಕೆಯನ್ನು ತಡೆಗಟ್ಟಲಾಗಿದ್ದು, ಒಟ್ಟಾರೆ 8.94 ಲಕ್ಷ ರೂ. ದಂಡದ ರೂಪದಲ್ಲಿ ಸಂಗ್ರಹವಾಗಿದೆ.
ಇಂತಹ ಅಕ್ರಮಗಳಲ್ಲಿ ಭಾಗಿಯಾಗಿರುವ ಅಥವಾ ಟಿಕೆಟ್ ನೀಡುವಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವ ಸಂಸ್ಥೆಯ ನೌಕರರ ವಿರುದ್ಧವೂ ಕೆ.ಎಸ್.ಆರ್.ಟಿ.ಸಿ ಕಠಿಣ ನಿಲುವು ತಳೆದಿದೆ. ಇಂತಹ ಅಕ್ರಮಗಳಿಗೆ ಕಾರಣರಾದ ಸಿಬ್ಬಂದಿಗಳ ವಿರುದ್ಧ ಈಗಾಗಲೇ ಇಲಾಖಾ ಮಟ್ಟದ ಶಿಸ್ತು ಕ್ರಮಗಳನ್ನು ಜರುಗಿಸಲಾಗಿದೆ ಎಂದು ಸಂಸ್ಥೆ ಖಚಿತಪಡಿಸಿದೆ.
ಮುಂದಿನ ದಿನಗಳಲ್ಲೂ ಈ ಕಾರ್ಯಾಚರಣೆಗಳು ಮುಂದುವರಿಯಲಿದ್ದು, ಪದೇ ಪದೇ ನಿಯಮ ಉಲ್ಲಂಘಿಸುವವರಿಗೆ ಮತ್ತಷ್ಟು ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಇದೇ ವೇಳೆ ಪ್ರಯಾಣಿಕರು ಜವಾಬ್ದಾರಿಯಿಂದ ವರ್ತಿಸಿ, ಪ್ರಯಾಣದ ಅವಧಿಯಲ್ಲಿ ಸೂಕ್ತ ಟಿಕೆಟ್ ಅಥವಾ ಪಾಸ್ಗಳನ್ನು ಖರೀದಿಸಿ ಸಂಸ್ಥೆಯೊಂದಿಗೆ ಸಹಕರಿಸಬೇಕು ಎಂದು ಕೆ.ಎಸ್.ಆರ್.ಟಿ.ಸಿ ಮನವಿ ಮಾಡಿದೆ.