ಬೆಂಗಳೂರು: ಆರ್.ಎಸ್.ಎಸ್ ನೋಂದಣಿ ಬಗ್ಗೆ ವಿವರ ಕೇಳಿ ಮೋಹನ್ ಭಾಗವತ್ ಅವರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದ ವಿಚಾರವಾಗಿ ಇದೀಗ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಿಯಾಂಕ್ ಖರ್ಗೆ ವಿರುದ್ಧ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.
ಸ್ವಾತಂತ್ರ್ಯ ಯೋಧರು ಉದಾತ್ತ ಉದ್ದೇಶಕ್ಕಾಗಿ ತಮ್ಮ ಬೆವರ ಹನಿಯ ಹಣವನ್ನು ತೊಡಗಿಸಿ ಕಟ್ಟಿದ ಸುಮಾರು 5000 ಕೋಟಿಯ ಆಸ್ತಿ ಹೊಂದಿದ್ದ ಹೆರಾಲ್ಡ್ ಸಂಸ್ಥೆಯನ್ನು ’ಯಂಗ್ ಇಂಡಿಯನ್ ‘ ಹೆಸರಲ್ಲಿ ನುಂಗಿ ನೀರು ಕುಡಿದ ನೆಹರು ಕುಟುಂಬದ ಮಹಾನ್ ಫಲಾನುಭವಿಗಳಾಗಿರುವ ಖರ್ಗೆ ಕುಟುಂಬದ ಪ್ರಿಯಾಂಕ ಖರ್ಗೆ ಅವರೇ, ರಾಷ್ಟ್ರೀಯ ಸ್ವಯಂ ಸೇವಕ ಸಂಘ ಪಾರದರ್ಶಕ ನಡೆ-ನುಡಿಯನ್ನು, ರಾಷ್ಟ್ರೀಯ ಬದ್ಧತೆಯನ್ನು ಪಸರಿಸುವಲ್ಲಿ ತೋರಿದ ಸಮರ್ಪಣೆ ಹಾಗೂ ತ್ಯಾಗದ ಪ್ರತೀಕವಾಗಿ ಇಂದು ವಿಶ್ವದ ಅತ್ಯಂತ ದೊಡ್ಡ ಸಂಸ್ಥೆಯಾಗಿ ಬೆಳೆದು ನಿಂತಿದೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಚಟುವಟಿಕೆಗಳೆಲ್ಲವೂ ನೇರ-ದಿಟ್ಟ- ಪಾರದರ್ಶಕ. ಪ್ರತೀ ಚಟುವಟಿಕೆಗಳೂ ಬಹಿರಂಗದಲ್ಲಿ ಅನಾವರಣ ಎಂದು ಟೀಕಿಸಿದ್ದಾರೆ.
ರಾಷ್ಟ್ರ ವಿಧ್ವಂಸಕ ಚಟುವಟಿಕೆಯ ಅನೇಕ ಅಲ್ಪ ಸಂಖ್ಯಾತ ಹೆಸರಿನ ಮತೀಯವಾದಿ ಸಂಘಟನೆಗಳು ಈ ದೇಶದಲ್ಲಿ ತಲೆಯೆತ್ತಿರುವುದು, ಅಕ್ರಮ ವಿದೇಶಿ ದೇಣಿಗೆ ಪಡೆದು ರಾಷ್ಟ್ರದ್ರೋಹಿ ಚಟುವಟಿಕೆಗಳಲ್ಲಿ ತೊಡಗಿಸುತ್ತಿರುವ ಮಾಹಿತಿ ಗೃಹ ಇಲಾಖೆ ನಡೆಸುತ್ತಿರುವ ನಿಮ್ಮ ಬಳಿಯೇ ಇದೆ. ಈ ಬಗ್ಗೆ ಪತ್ರ ಬರೆದು ಆ ಸಂಸ್ಥೆಗಳಿಂದ ವಿವರ ಏಕೆ ನೀವು ಕೇಳುವುದಿಲ್ಲ?. ಕೇವಲ ಮತಾಂಧತೆಯನ್ನು ಬಿತ್ತಿ ರಾಷ್ಟ್ರೀಯತೆಯನ್ನು ವಿರೋಧಿಸಲು ಪ್ರಚೋದನೆ ನೀಡುವ ಸಂಸ್ಥೆಗಳ ಚಟುವಟಿಕೆಗಳು ನಿಮ್ಮ ಕಣ್ಣಿಗೆ ಬೀಳುವುದಿಲ್ಲ, ಕಿವಿಗೂ ಕೇಳಿಸುವುದಿಲ್ಲ. ಏಕೆಂದರೆ ಅದರ ಮೂಲದಿಂದ ಉತ್ಪತ್ತಿಯಾಗುತಿರುವ ಮತಬ್ಯಾಂಕ್ ಆಧರಿಸಿ ಅಧಿಕಾರ ಅನುಭವಿಸುತ್ತಿರುವ ನಿಮಗೆ ರಾಷ್ಟ್ರ ವಿಧ್ವಂಸಕ ಚಟುವಟಿಕೆಯ ಬಗ್ಗೆ ತಲೆಕೆಡಿಸಿಕೊಳ್ಳುವ ಬದ್ಧತೆ-ನೈತಿಕತೆ ಇರಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.
ರಾಷ್ಟ್ರೀಯ ಸ್ವಯಂ ಸಂಘದ ನೋಂದಣಿ ಕುರಿತು ವಿಪರೀತಿ ತಲೆಕೆಡಿಸಿಕೊಂಡಿರುವ ನಿಮ್ಮಂತವರಿಗೆ ಮೋಹನ್ ಭಾಗವತ್ ಅವರು ಏನು ಉತ್ತರ ಕೊಡಬೇಕೋ ಸರಿಯಾಗಿಯೇ ಕೊಟ್ಟಿದ್ದಾರೆ. ಸದ್ಯ ನಿಮ್ಮ ರಾಜಕೀಯ ಬಂಡವಾಳ RSS ಅನ್ನು ಬಾಲಿಶವಾಗಿ ಟೀಕಿಸುವುದು, ಆ ಮೂಲಕ ನೆಹರು ಕುಟುಂಬದ ಕುಡಿಗಳನ್ನು ಸಂತೃಪ್ತಿ ಪಡಿಸುವುದು. ನಿಮ್ಮ ಪ್ರತಿ ತೆಗಳಿಕೆಯು ಸುದ್ದಿಯಾಗುತ್ತದೆ, ಪ್ರತಿಕ್ರಿಯೆ ಹರಿದು ಬರುತ್ತದೆ ಎಂಬ ಭ್ರಮೆಯ ಪೊರೆ ಅತೀ ಶೀಘ್ರದಲ್ಲಿಯೇ ಕಳಚಿ ಬೀಳಲಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.