ಬೆಂಗಳೂರು: ದಾವಣಗೆರೆ ಹರಿಹರ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ಅವರಿಗೆ ಪೋಕ್ಸೋ ಕೇಸ್ ನಲ್ಲಿ ನಿರೀಕ್ಷಣಾ ಜಾಮೀನು ನೀಡಿದ್ದು ಸರಿಯಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಮಕ್ಕಳ ದುರ್ಬಳಕೆ ಹಾಗೂ ದೌರ್ಜನ್ಯ ಎಸಗಿದ ಆರೋಪದಡಿ ವಚನಾನಂದ ಸ್ವಾಮೀಜಿ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದೆ. ಆದರೆ, ದೂರು ದಾಖಲಾಗುವ ಮುನ್ನವೇ ದಾವಣಗೆರೆ ಜಿಲ್ಲಾ ನ್ಯಾಯಾಲಯವು ನಿರೀಕ್ಷಣಾ ಜಾಮೀನು ನೀಡಿದ್ದು, ಇದಕ್ಕೆ ಕರ್ನಾಟಕ ಹೈಕೋರ್ಟ್ ಅಸಮಾಧನ ವ್ಯಕ್ತಪಡಿಸಿದೆ.
ನಿರೀಕ್ಷಣಾ ಜಾಮೀನು ಪ್ರಶ್ನಿಸಿ ಬಾಲಕನ ತಾಯಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ದೂರು ದಾಖಲಾಗುವ ಮುನ್ನವೇ ನಿರೀಕ್ಷಣಾ ಜಾಮೀನು ಕೊಟ್ಟಿದ್ದಾರೆ. ನಿರೀಕ್ಷಣಾ ಜಾಮೀನು ಕೊಟ್ಟ ರೀತಿ ಆಘಾತಕಾರಿಯಾಗಿದೆ. ಮೇಲ್ನೋಟಕ್ಕೆ ನಿರೀಕ್ಷಣಾ ಜಾಮೀನು ನೀಡಿದ ವಿಧಾನ ಸರಿಯಲ್ಲ ಎಂದು ತಿಳಿಸಿದೆ.
ಸ್ವಾಮೀಜಿ ವಿರುದ್ಧ ಗಂಭೀರ ಸೆಕ್ಷನ್ಗಳುಳ್ಳ ಪೋಕ್ಸೋ ಕೇಸ್ ದಾಖಲಾಗಿದೆ. ಆದರೂ ಮೇಲ್ನೋಟಕ್ಕೆ ನಿರೀಕ್ಷಣಾ ಜಾಮೀನು ನೀಡಿದ ವಿಧಾನ ಸರಿಯಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ವಚನಾನಂದ ಸ್ವಾಮೀಜಿಗೆ ನೋಟಿಸ್ ನೀಡಿ ಮುಂದಿನ ವಿಚಾರಣೆಯನ್ನು ಜೂನ್ 23ಕ್ಕೆ ನಿಗದಿಪಡಿಸಿದೆ.
ದಾವಣಗೆರೆ ಜಿಲ್ಲಾ ಕೋರ್ಟ್ ನೀಡಿರುವ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಹೀಗಾಗಿ ಹೈಕೋರ್ಟ್, ಸ್ವಾಮೀಜಿಯ ಜಾಮೀನು ರದ್ದುಗೊಳಿಸುತ್ತಾ? ಅಥವಾ ಯಾವ ತೀರ್ಪು ನೀಡಲಿದೆ ಎಂಬುದನ್ನು ಕಾದುನೋಡಬೇಕಿದೆ.
ಏಪ್ರಿಲ್ ಆರಂಭದಲ್ಲಿ ಹರಿಹರದ ಹನಗವಾಡಿ ಬಳಿಯ ಪಂಚಮಸಾಲಿ ಪೀಠದಲ್ಲಿ ನಡೆದ ಸಭೆಯಲ್ಲಿ 15 ಟ್ರಸ್ಟಿಗಳ ಪೈಕಿ 13 ಟ್ರಸ್ಟಿಗಳು ಭಾಗವಹಿಸಿ ನಿರ್ಣಯ ತೆಗೆದುಕೊಂಡು ಸ್ವಾಮೀಜಿಗಳನ್ನು ಮಠದ ಪೀಠದಿಂದ ಉಚ್ಛಾಟನೆ ಮಾಡಿದ್ದರು. ಇದಕ್ಕೆ ಕಾರಣವಾಗಿದ್ದು 2 ಪೀಠಗಳ ನಿರ್ವಹಣೆಯ ವಿಚಾರ. 2018ರಲ್ಲಿ ಶ್ರೀ ಅವರನ್ನು ಇಲ್ಲಿನ ಟ್ರಸ್ಟಿಗಳು ಜಗದ್ಗುರು ಮಾಡಿದ್ದರು. ಬಳಿಕ ಹಲವಾರು ಬಾರಿ ಎರಡು ಪೀಠಗಳ ಆಯ್ಕೆ ಮಾಡಿಕೊಳ್ಳುವಂತೆ ಹೇಳಿದ್ದರು. ಆದರೆ ಇದನ್ನು ವಚನಾನಂದ ಸ್ವಾಮೀಜಿ ಪಾಲಿಸದ ಆರೋಪದಲ್ಲಿ ಟ್ರಸ್ಟಿಗಳು ಸರ್ವಾನುಮತವಾಗಿ ಪದಚ್ಯುತಗೊಳಿಸಿದ್ದರು.
ವಚನಾನಂದ ಸ್ವಾಮೀಜಿ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ, ಹಿಂಸೆ ನೀಡುತ್ತಾರೆ ಎಂದು ಸ್ವತಃ ಮಕ್ಕಳು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಮಕ್ಕಳ ಕಲ್ಯಾಣ ಸಮಿತಿ ಅಧಿಕಾರಿಗಳು ಮಠಕ್ಕೆ ಭೇಟಿ ನೀಡಿ ಸ್ವಾಮೀಜಿಯ ವಿಚಾರಣೆ ನಡೆಸಿದ್ದರು. ಅಲ್ಲದೇ ವಚನಾನಂದ ಸ್ವಾಮೀಜಿ ವಿರುದ್ಧ ಮಠದ ಬಾಲಕನೋರ್ವನ ತಾಯಿ ನೀಡಿದ ದೂರಿನ ಮೇರೆಗೆ ಪ್ರಕರಣ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಈಗಾಗಲೇ ಇದೇ ಪ್ರಕರಣದಲ್ಲಿ ಸ್ವಾಮೀಜಿಯ ವಿಚಾರಣೆ ನಡೆದು, ಮೆಡಿಕಲ್ ಟೆಸ್ಟ್ ಕೂಡ ನಡೆಸಲಾಗಿದೆ.
ಸ್ವಾಮೀಜಿ ವಿರುದ್ಧ ಮಕ್ಕಳ ದುರ್ಬಳಕೆ ಹಾಗೂ ದೌರ್ಜನ್ಯ ಎಸಗಿದ ಆರೋಪದಡಿ ದಾಖಲಾಗಿದ್ದ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಸ್ವಾಮೀಜಿ, ಏಪ್ರಿಲ್ 21ರಂದು ದಾವಣಗೆರೆ ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗೆ ಜಿಲ್ಲಾ ನ್ಯಾಯಾಲಯ ಷರತ್ತುಗಳೊಂದಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.