ಬೆಳಗಾವಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹಿನ್ನೆಲೆಯಲ್ಲಿ ಶಿಕ್ಷಕನಿಗೆ ಪೋಷಕರು ಥಳಿಸಿದ ಘಟನೆ ನಡೆದಿದೆ.
ಚಿಕ್ಕೋಡಿ ಪಟ್ಟಣದ ಶಾಲೆಯೊಂದರ ಶಿಕ್ಷಕ ಶ್ರೀಶೈಲ ಕುಂಬಾರ ವಿರುದ್ಧ ಹಲವು ವಿದ್ಯಾರ್ಥಿನಿಯರು, ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಕನ್ನಡ ವಿಷಯದಲ್ಲಿ ಪಾಸ್ ಮಾಡುವುದಾಗಿ ಹೇಳಿ ವಿದ್ಯಾರ್ಥಿಗಳನ್ನು ಪ್ರತ್ಯೇಕವಾಗಿ ಶಾಲೆಯ ಕೊಠಡಿ ಮತ್ತು ಶೌಚಾಲಯದ ಬಳಿಗೆ ಕರೆದುಕೊಂಡು ಹೋಗಿ ಅನುಚಿತವಾಗಿ ವರ್ತಿಸುತ್ತಿದ್ದ. ಐದಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ.
ವಿದ್ಯಾರ್ಥಿಗಳು, ಪೋಷಕರಿಗೆ ಮಾಹಿತಿ ನೀಡಿದ್ದು, ಪೋಷಕರು ಶಾಲೆಗೆ ಆಗಮಿಸಿ ಶಿಕ್ಷಕನನ್ನು ಪ್ರಶ್ನಿಸಿದ್ದಾರೆ. ಆಕ್ರೋಶದಿಂದ ಶಿಕ್ಷಕನನ್ನು ಥಳಿಸಿದ್ದಾರೆ. ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಮಾಹಿತಿ ತಿಳಿದು ಚಿಕ್ಕೋಡಿ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಶಿಕ್ಷಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಚಿಕ್ಕೋಡಿ ಡಿಡಿಪಿಐ ಸೀತಾರಾಮು ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳು, ಪೋಷಕರು ಮತ್ತು ಮುಖ್ಯ ಶಿಕ್ಷಕರಿಂದ ಮಾಹಿತಿ ಪಡೆದಿದ್ದಾರೆ. ಚಿಕ್ಕೋಡಿ ಬಿಇಒ ನೇತೃತ್ವದಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.