ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ, ಅಗೌರವ, ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿಯ ಆರು ರಾಜ್ಯಸಭೆ ಸದಸ್ಯರು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಹಕ್ಕುಚ್ಯುತಿ ನೋಟಿಸ್ ಸಲ್ಲಿಸಿದ್ದಾರೆ.
ಅವರ ಆರೋಪದ ಕುರಿತಾಗಿ ಪರಿಶೀಲನೆ ಮತ್ತು ತನಿಖೆ ನಡೆಸಿ ವರದಿ ಸಲ್ಲಿಸಲು ರಾಜ್ಯಸಭೆ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಅವರು ನೋಟಿಸ್ ಅನ್ನು ಹಕ್ಕು ಬಾಧ್ಯತಾ ಸಮಿತಿಗೆ ಕಳುಹಿಸಿದ್ದಾರೆ ಎಂದು ರಾಜ್ಯಸಭೆ ಪ್ರಧಾನ ಕಾರ್ಯದರ್ಶಿ ಪಿ.ಸಿ. ಮೋದಿ ತಿಳಿಸಿದ್ದಾರೆ.
ಬಿಜೆಪಿ ಸದಸ್ಯರಾದ ಮಿಥಿಲೇಶ್ ಕುಮಾರ್, ಬ್ರಿಜ್ ಲಾಲ್, ಸುಮಿತ್ರಾ ಬಾಲ್ಮಿಕ್, ಶಿವೇಶ್ ಕುಮಾರ್, ಸಿಕಂದರ್ ಕುಮಾರ್ ಮತ್ತು ನಾಗೇಂದ್ರ ರಾಯ್ ಅವರು ನೋಟಿಸ್ ಸಲ್ಲಿಸಿದ್ದಾರೆ. ಪ್ರಧಾನಿ ಮೋದಿ ವಿರುದ್ಧ ಖರ್ಗೆ ನಿರಂತರವಾಗಿ ತೀವ್ರ ಅವಹೇಳನಕಾರಿ ಆಗೌರವಯುತ ಹೇಳಿಕೆ ನೀಡುತ್ತಿದ್ದಾರೆ. ಇದು ಸಂಸತ್ ಮತ್ತು ಅದರ ಸದಸ್ಯರ ಘನತೆಗೆ ಕುಂದು ತರುತ್ತಿದೆ ಎಂದು ಆರೋಪಿಸಿದ್ದಾರೆ.
ಕಳೆದ ಏಪ್ರಿಲ್ ನಲ್ಲಿ ಚುನಾವಣೆ ಪ್ರಚಾರದ ವೇಳೆ ಖರ್ಗೆಯವರು ಪ್ರಧಾನಿಯವರನ್ನು ಪರೋಕ್ಷವಾಗಿ ಉಗ್ರಗಾಮಿ ಎಂದು ಕರೆದಿದ್ದಾರೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಬಗ್ಗೆ ಸ್ಪಷ್ಟನೆ ನೀಡಿದ ಮಲ್ಲಿಕಾರ್ಜುನ ಖರ್ಗೆ ತಾವು ಪ್ರಧಾನಿಯವರನ್ನು ವೈಯಕ್ತಿಕವಾಗಿ ಆ ರೀತಿ ಕರೆದಿಲ್ಲ ಎಂದು ಸಮರ್ಥಿಸಿಕೊಂಡಿದ್ದರು.
ಇದೀಗ ಬಿಜೆಪಿಯ ಆರು ಸಂಸದರು ನೀಡಿರುವ ನೋಟಿಸ್ ಆಧರಿಸಿ ರಾಜ್ಯಸಭೆ ವಿಪಕ್ಷ ನಾಯಕ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ತನಿಖೆ ನಡೆಸಿ ವರದಿ ಸಲ್ಲಿಸಲು ರಾಜ್ಯಸಭೆ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಸದನದ ಹಕ್ಕುಚ್ಯುತಿ ಸಮಿತಿಗೆ ಕಳುಹಿಸಿದ್ದಾರೆ.