ಬೆಂಗಳೂರು: ವಿಧಾನ ಪರಿಷತ್ 7 ಸ್ಥಾನಗಳಿಗೆ ಮತದಾನ ಆರಂಭವಾಗಿದ್ದು, ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ಸ್ಥಾಪಿಸಲಾಗಿರುವ ಮತಗಟ್ಟೆಯಲ್ಲಿ ಮತದಾನ ನಡೆಯುತ್ತಿದೆ. ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಮೂರು ಪಕ್ಷಗಳ ಶಾಸಕರು ವಿಧಾನಸೌಧಕ್ಕೆ ಆಗಮಿಸಿ ಮತದಾನ ಮಾಡುತ್ತಿದ್ದಾರೆ.
ಬಿಜೆಪಿಯಿಂದ ಉಚ್ಛಾಟಿತರಾಗಿರುವ ಶಾಸಕರಾದ ಎಸ್.ಟಿ.ಸೋಮಶೇಖರ್, ಶಿವರಾಮ್ ಹೆಬ್ಬಾರ್ ಹಾಗೂ ಬಸನಗೌಡ ಪಾಟೀಲ್ ಯಾವ ಪಕ್ಷದ ಅಭ್ಯರ್ಥಿಗಳಿಗೆ ಮತ ಹಾಕಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.
ವಿಧಾನಸೌಧದಲ್ಲಿ ಸುದ್ದಿಗಾರರೊಮ್ದಿಗೆ ಮಾತನಾಡಿದ ಶಾಸಕ ಶಿವರಾಮ್ ಹೆಬ್ಬಾರ್, ಬಿಜೆಪಿಯವರು ನಮ್ಮನ್ನು ಸೌಜನ್ಯಕ್ಕಾದರೂ ಬಿಜೆಪಿಗೆ ಮತಹಾಕುವಂತೆ ಕೇಳುತ್ತಾರೆ ಎಂದುಕೊಂಡಿದ್ದೆವು. ಆದರೆ ಬಿಜೆಪಿಯವರಾಗಲಿ ಜೆಡಿಎಸ್ ನವರಾಗಲಿ ಯಾರೂ ನಮ್ಮನ್ನು ಕೇಳಿಲ್ಲ. ಕಾಂಗ್ರೆಸ್ ನಾಯಕರು ನಮ್ಮನ್ನು ಸಂಪರ್ಕಿಸಿದ್ದರು. ಸ್ವತಃ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಅಭ್ಯರ್ಥಿಗೆ ಮತಹಾಕುವಂತೆ ಮನವಿ ಮಾಡಿಕೊಂಡಿದ್ದಾರೆ. ಆದರೆ ನಾವು ಇನ್ನೂ ಯಾರಿಗೆ ಮತ ಹಾಕಬೇಕೆಂದು ನಿರ್ಧರಿಸಿಲ್ಲ ಎಂದರು.
ಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ನಾವು ಭೇಟಿಯಾಗಿದ್ದೆವು. ನಮ್ಮ ಕ್ಷೇತ್ರದ ಅಭಿವೃದ್ಧಿಗೆ ಕ್ಷೇತ್ರದ ಜನರ ಅಭಿವೃದ್ಧಿಗೆ ಕೇಳಿದ್ದೆವು. ಆ ನಿಟ್ಟಿನಲ್ಲಿ ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಆದಾಗ್ಯೂ ನಾವು ನಮ್ಮ ಆತ್ಮಸಾಕ್ಷಿಯಂತೆ ಮತದಾನ ಮಾಡುತ್ತೇವೆ. ನಮ್ಮ ಆತ್ಮಸಾಕ್ಷಿಗೆ ಏನನಸುತ್ತದೆ ಹಾಗೇ ಮತ ಹಾಕುತ್ತೇವೆ ಎಂದು ಹೇಳಿದರು.