ಬೆಂಗಳೂರು: ಶಿವಮೊಗ್ಗವನ್ನು ಮಂಗಳೂರಿನ ಹೈಕೋರ್ಟ್ ಸಂಚಾರಿ ಪೀಠಕ್ಕೆ ಸೇರಿಸಬಾರದು ಮತ್ತು ಮಧ್ಯಕರ್ನಾಟಕದ ಕೇಂದ್ರವಾದ ಶಿವಮೊಗ್ಗಕ್ಕೆ ಹೈಕೋರ್ಟ್ ಸಂಚಾರಿ ಪೀಠ ಕೊಡಬೆಕೆಂದು ಒತ್ತಾಯಿಸಿ ರಾಜ್ಯ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳನ್ನು ಭೇಟಿ ಮಾಡಿ ಶಿವಮೊಗ್ಗ ಜಿಲ್ಲೆಯ ಸಂಸದರು ಮತ್ತು ಜಿಲ್ಲೆಯ ಎಲ್ಲಾ ಶಾಸಕರುಗಳು ನೀಡಿದ ಮನವಿ ಪತ್ರ ಮತ್ತು 47ಕ್ಕೂ ಹೆಚ್ಚು ಸಂಘಟನೆಗಳು ನೀಡಿದ ಮನವಿಗಳನ್ನು ನೀಡಿ ಹಕ್ಕೊತ್ತಾಯಗಳನ್ನು ತಿಳಿಸಲಾಯಿತು.
ಕಲ್ಯಾಣ ಕರ್ನಾಟಕ ಮತ್ತು ಉತ್ತರ ಕರ್ನಾಟಕದ ರೀತಿ ಮಧ್ಯ ಕರ್ನಾಟಕದ ಕೇಂದ್ರ ಸ್ಥಾನ ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪಿಸಬೇಕೆಂದು ಒತ್ತಾಯಿಸಿ ಶಿವಮೊಗ್ಗ ಜಿಲ್ಲಾ ಹೋರಾಟ ಸಮಿತಿ ವತಿಯಿಂದ ರಾಜ್ಯ ಸರ್ಕಾರ ಮತ್ತು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಮನವಿ ಸಲ್ಲಿಸಲಾಗಿದೆ.
ಮಧ್ಯ ಕರ್ನಾಟಕದ ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳನ್ನು ಒಳಗೊಂಡ ಒಂದು ಹೈಕೋರ್ಟ್ ಸಂಚಾರಿ ಪೀಠ ಸ್ಥಾಪಿಸುವಂತೆ ಹಲವು ದಿನಗಳಿಂದ ಹೋರಾಟ ನಡೆಸಲಾಗುತ್ತಿದೆ. ಆದರೆ ಮಂಗಳೂರಿನಲ್ಲಿ ಪ್ರಾರಂಭಿಸಲು ಉದ್ದೇಶಿಸಿರುವ ಹೈಕೋರ್ಟ್ ಸಂಚಾರಿ ಪೀಠಕ್ಕೆ ಕರಾವಳಿ ಜಿಲ್ಲೆಗಳನ್ನು ಮಾತ್ರ ಸೇರಿಸಲಾಗಿದೆ. ಶಿವಮೊಗ್ಗದಲ್ಲಿ ಸಂಚಾರಿ ಪೀಠ ಸ್ಥಾಪಿಸುವ ಬಗೆಗಿನ ಬೇಡಿಕೆ ಪರಿಶೀಲಿಸುವುದಾಗಿ ರಾಜ್ಯ ಸರ್ಕಾರದಿಂದ ಭರವಸೆ ಸಿಕ್ಕಿದೆ. ಆದರೆ, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ಮುಖ್ಯ ನ್ಯಾಯಮೂರ್ತಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಲಾಗಿದೆ.
ಹೋರಾಟ ಸಮಿತಿ ಗೌರವಾಧ್ಯಕ್ಷ ಕೆ. ಬಸಪ್ಪಗೌಡ, ಕಾರ್ಯಾಧ್ಯಕ್ಷ ಜಿ.ಆರ್. ರಾಘವೇಂದ್ರಸ್ವಾಮಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಜಸ್ವಂತ್ ಸಿಂಗ್ ವರದಿಯ ಪ್ರಕಾರ ಹೈಕೋರ್ಟ್ ಪೀಠ ಸ್ಥಾಪನೆಗೆ ಶಿವಮೊಗ್ಗ ಎಲ್ಲಾ ರೀತಿಯ ಅರ್ಹತೆ ಹೊಂದಿದೆ. ಶಿವಮೊಗ್ಗದಿಂದ ಬೆಂಗಳೂರಿಗೆ ಇರುವ ದೂರ, ಪ್ರಕರಣಗಳ ಸಂಖ್ಯೆ, ವಕೀಲರ ತಂಡ ಈ ಎಲ್ಲಾ ಅಂಶಗಳನ್ನು ನೆರೆಹೊರೆಯ ಜಿಲ್ಲೆಗಳು ಪೂರೈಸುತ್ತವೆ. ಈಗಾಗಲೇ ಶಿವಮೊಗ್ಗ ಮತ್ತು ಮಂಗಳೂರು ಭೌಗೋಳಿಕವಾಗಿ ಒಂದಕ್ಕೊಂದು ಹೊಂದಿಕೊಂಡ ಜಿಲ್ಲೆಗಳಾಗಿವೆ. ಇಲ್ಲಿಂದಲೇ ಬೇಡಿಕೆ ಮತ್ತು ಒತ್ತಾಯ ಎರಡು ಆರಂಭವಾಗಿದ್ದು, ಈ ಎರಡು ಜಿಲ್ಲೆಗಳ ಬೇಡಿಕೆಗಳನ್ನು ತುಲನೆ ಮಾಡದೆ ಯಾವುದೇ ನಿರ್ಧಾರ ಕೈಗೊಳ್ಳಬಾರದು ಎಂದು ಮನವಿ ಮಾಡಲಾಗಿದೆ. ಆದರೂ ಪ್ರಸ್ತಾವಿತ ತೀರ್ಮಾನ ತೆಗೆದುಕೊಳ್ಳಲಾಗಿದೆ. ಶಿವಮೊಗ್ಗ ಜಿಲ್ಲೆಯ ಜನಾಭಿಪ್ರಾಯ, ಜನಪ್ರತಿನಿಧಿಗಳು, ವಕೀಲರ ಅಭಿಪ್ರಾಯ ಸಂಗ್ರಹಿಸದೆ ಏಕಮುಖ ನಿರ್ಧಾರ ಕೈಗೊಳ್ಳಲಾಗಿದೆ. ಹೀಗಾಗಿ ಮುಖ್ಯ ನ್ಯಾಯಮೂರ್ತಿಗಳು ಮತ್ತು ರಾಜ್ಯ ಸರ್ಕಾರ ಶಿವಮೊಗ್ಗದ ಬೇಡಿಕೆಯನ್ನು ಪರಿಗಣಿಸಿ ಶಿವಮೊಗ್ಗದಲ್ಲಿಯೇ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪಿಸಬೇಕೆಂದು ಮನವಿ ಮಾಡಲಾಗಿದೆ.