ಬೆಂಗಳೂರು: ಕನ್ನಡ ಚಿತ್ರರಂಗದ ಜನಪ್ರಿಯ ನಟ ವಿನೋದ್ ಪ್ರಭಾಕರ್ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಕಾಣಿಸಿಕೊಂಡಿದ್ದು, ಅವರನ್ನು ಬೆಂಗಳೂರಿನ ನಾಗರಭಾವಿಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಿಕಿತ್ಸೆ ಬಳಿಕ ಅವರು ಚೇತರಿಸಿಕೊಂಡಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ.
ಶನಿವಾರ ಮನೆಯಲ್ಲಿದ್ದಾಗ ಅವರಿಗೆ ದಿಢೀರ್ ಆಗಿ ರಕ್ತದೊತ್ತಡ (Blood Pressure) ಸಂಬಂಧಿತ ಸಮಸ್ಯೆ ಹಾಗೂ ಅಸ್ವಸ್ಥತೆ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ತಕ್ಷಣವೇ ಅವರನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ವಿನೋದ್ ಪ್ರಭಾಕರ್ ಅವರನ್ನು ಆಸ್ಪತ್ರೆಯ ಕಾರ್ಡಿಯಾ ಕೇರ್ ವಿಭಾಗದ ತೀವ್ರ ನಿಗಾ ಘಟಕದಲ್ಲಿ (ICU) ಇರಿಸಿ ಚಿಕಿತ್ಸೆ ನೀಡಲಾಗಿದೆ. ವೈದ್ಯರ ತಂಡವು ಅವರ ಆರೋಗ್ಯದ ಮೇಲೆ ನಿರಂತರ ನಿಗಾ ವಹಿಸಿದ್ದು, ಅಗತ್ಯ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಿದೆ.
ಇತ್ತೀಚೆಗೆ ಅವರು ತಮ್ಮ ಮುಂಬರುವ ಬಹುನಿರೀಕ್ಷಿತ ‘ಬಲರಾಮನ ದಿನಗಳು’ ಚಿತ್ರದ ಪ್ರಚಾರ ಕಾರ್ಯಗಳಲ್ಲಿ (Promotions) ತೀವ್ರವಾಗಿ ಬ್ಯುಸಿಯಾಗಿದ್ದರು. ಸತತ ಕೆಲಸದ ಒತ್ತಡದಿಂದಾಗಿ ಆರೋಗ್ಯದಲ್ಲಿ ಈ ಏರುಪೇರು ಉಂಟಾಗಿದೆ ಎನ್ನಲಾಗಿದೆ. ಪ್ರಸ್ತುತ ನುರಿತ ವೈದ್ಯರ ತಂಡ ಅವರಿಗೆ ಸೂಕ್ತ ಚಿಕಿತ್ಸೆ ನೀಡುತ್ತಿದ್ದು, ನಟನ ಆರೋಗ್ಯ ಸ್ಥಿತಿ ಸದ್ಯಕ್ಕೆ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಬಲರಾಮನ ದಿನಗಳು ಚಿತ್ರದ ಪ್ರಚಾರದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದ ವಿನೋದ್ ಪ್ರಭಾಕರ್, ನಿರಂತರ ಕೆಲಸದ ಒತ್ತಡದಿಂದ ಲೋಬಿಪಿ ಆಗಿದೆ. ಆರೋಗ್ಯದಲ್ಲಿ ಏರುಪೇರು ಕಂಡಾಗ ಪತ್ನಿಯೊಂದಿಗೆ ನಾಗರಭಾವಿಯ ಜಿಎಂ ಖಾಸಗಿ ಆಸ್ಪತ್ರೆಗೆ ಧಾವಿಸಿದ್ದರು. ವೈದ್ಯರ ಸಲಹೆಯಂತೆ ಎಲ್ಲಾ ಬಗೆಯ ಚೆಕಪ್ ಗಳನ್ನ ಮಾಡಿಸಿಕೊಳ್ತಿರೋ ವಿನೋದ್ ಪ್ರಭಾಕರ್ ಈಗ ಆರಾಮಾಗಿದ್ದಾರೆ. ಇಂದು ಬೆಳಿಗ್ಗೆ ವಿನೋದ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದು, ಸೋಮವಾರದಿಂದ ಮತ್ತೆ ಬಲರಾಮ ಚಿತ್ರದ ಪ್ರಚಾರ ಕೆಲಸದಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಬಲರಾಮನ ದಿನಗಳು ಚಿತ್ರ ಇದೇ ಜೂ. 26ರಂದು ಬಿಡುಗಡೆಯಾಗಲಿದೆ.