ಕೋಲಾರ: ಮಾವಿನ ಬೆಳೆಗೆ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ಇಂದು ಕೋಲಾರ ಜಿಲ್ಲಾ ಬಂದ್ ಗೆ ಕರೆ ನೀಡಲಾಗಿದೆ.
ಮಾವು ಬೆಳೆಗಾರರ ಸಂಘ ಮತ್ತು ವಿವಿಧ ಸಂಘ ಸಂಸ್ಥೆಗಳಿಂದ ಬಂದ್ ಗೆ ಕರೆ ನೀಡಲಾಗಿದ್ದು, ಕೋಲಾರ, ಶ್ರೀನಿವಾಸಪುರ ಸೇರಿದಂತೆ ಹಲವು ತಾಲೂಕುಗಳಲ್ಲಿ ಬಂದ್ ಆಚರಣೆ ಮಾಡುವ ಸಾಧ್ಯತೆ ಇದೆ. ಮಾವಿಗೆ ಕನಿಷ್ಠ ಎಂಟರಿಂದ ಹತ್ತು ಸಾವಿರ ರೂಪಾಯಿ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಬೆಂಬಲ ಬೆಲೆ ಘೋಷಿಸಲು ಒತ್ತಾಯಿಸಿ ಬಂದ್ ಗೆ ಕರೆ ನೀಡಲಾಗಿದೆ.
ಜಿಲ್ಲಾ ಮಾವು ಬೆಳೆಗಾರರ ಸಂಘದ ಅಧ್ಯಕ್ಷ ನಿಲಟೂರು ಚಿನ್ನಪ್ಪರೆಡ್ಡಿ ಮಾತನಾಡಿ, ಮಾವಿಗೆ ಬೆಂಬಲ ಬೆಲೆ ಘೋಷಣೆ ಮಾಡದೆ ಮಾವು ಬೆಳೆಗಾರರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ. ಹೀಗಾಗಿ ಮಾವು ಬೆಳೆಗಾರರು, ರೈತ ಮುಖಂಡರು, ಕಾರ್ಮಿಕ ಸಂಘಟನೆಗಳು ಸೋಮವಾರ ಬಂದ್ ಗೆ ಕರೆ ನೀಡಿವೆ ಎಂದು ತಿಳಿಸಿದ್ದಾರೆ.
ಮಾವಿನ ಸೀಸನ್ ಮುಗಿಯುವ ಹಂತಕ್ಕೆ ಬಂದಿದ್ದು, ಬಹುತೇಕ ಬೆಳೆಗಾರರು ಕೊಯ್ಲು ಮಾಡುತ್ತಿದ್ದಾರೆ. ಶ್ರೀನಿವಾಸಪುರ ಕೇಂದ್ರೀಕೃತವಾಗಿ ಹೆಚ್ಚಿನ ಸಂಖ್ಯೆಯ ಕುಟುಂಬಗಳು ಮಾವು ಬೆಳೆಯನ್ನು ಜೀವನಾಡಿ ಬೆಳೆಯಾಗಿ ನಂಬಿ ಜೀವನ ಸಾಗಿಸುತ್ತಿದ್ದಾರೆ. ಕಳೆದ ಮೂರು ನಾಲ್ಕು ವರ್ಷಗಳಿಂದ ಸಮಸ್ಯೆಗಳ ಸುಳಿಗೆ ಸಿಲುಕಿದ್ದಾರೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಸರ್ಕಾರಗಳು ಬೆಳೆಗಾರರ ಕೈಹಿಡಿಯಬೇಕು. ಕನಿಷ್ಠ ಎಂಟರಿಂದ ಹತ್ತು ಸಾವಿರ ರೂಪಾಯಿ ಬೆಂಬಲ ಬೆಲೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಸರ್ಕಾರದ ಗಮನ ಸೆಳೆಯಲು ಕೊನೆಯ ಹಂತವಾಗಿ ಬಂದ್ ಗೆ ಕರೆ ನೀಡಲಾಗಿದೆ. ಆರ್ಥಿಕ ಸಾಮರ್ಥ್ಯ ಇಲ್ಲದ ಸಣ್ಣಪುಟ್ಟ ಮಾವು ಬೆಳೆಗಾರರು ಕೊಯ್ಲು ಮಾಡಲು ಸಾಧ್ಯವಾಗದೆ ಮರದಲ್ಲಿಯೇ ಮಾವನ್ನು ಬಿಡುತ್ತಿದ್ದು, ಇದನ್ನು ಸರ್ಕಾರದ ಗಮನಕ್ಕೆ ತರಲಾಗಿದೆ. ಬೆಂಬಲ ಬೆಲೆ ನೀಡುವಂತೆ ಅಧಿಕಾರಿಗಳು ಸೇರಿದಂತೆ ಎಲ್ಲರಿಗೂ ಮನವಿ ಮಾಡಲಾಗಿದೆ. ಆದರೆ ಸ್ಪಂದನೆ ದೊರೆಯದ ಕಾರಣ ಬಂದ್ ಗೆ ಕರೆ ನೀಡಲಾಗಿದ್ದು, ವ್ಯಾಪಾರಸ್ಥರು, ಹೋಟೆಲ್ ಮಾಲೀಕರು, ವಾಣಿಜ್ಯ ಸಂಸ್ಥೆಯವರು ಬೆಂಬಲಿಸುವಂತೆ ಕೋರಲಾಗಿದೆ.