ಬೆಂಗಳೂರು: ಭಾನುವಾರ ನಡೆದ ನೀಟ್ ಮರು ಪರೀಕ್ಷೆ ವೇಳೆ ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ಮೂವರು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ತಲುಪಲು ಸಾಧ್ಯವಾಗದೇ ಪರೀಕ್ಷೆಯಿಂದ ವಂಚಿತರಾಗಿದ್ದಾರೆ. ಆರ್.ಸಿ ಕಾಲೇಜಿನಲ್ಲಿ ನಡೆದ ಈ ಘಟನೆಗೆ ಪೋಷಕರು ಸಂಚಾರ ದಟ್ಟಣೆಯೇ ಕಾರಣವೆಂದು ಆರೋಪಿಸಿದ್ದಾರೆ. ಇದೇ ವಿಚಾರವಾಗಿ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್.ಅಶೋಕ್, ವಿದ್ಯಾರ್ಥಿಗಳ ಭವಿಷ್ಯ ಹಾಳಾಗಲು ಕಾಂಗ್ರೆಸ್ ಪಕ್ಷ ಕಾರಣ ಎಂದಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ನೀಟ್ ಪರೀಕ್ಷೆ ನಡೆಯುತ್ತಿದ್ದ ದಿನವೇ ಪ್ಯಾಲೇಸ್ ಗ್ರೌಂಡ್ಸ್ನಲ್ಲಿ ಕಾಂಗ್ರೆಸ್ ಪಕ್ಷ ಸಭೆ ನಡೆಸಿದ್ದು, ಇದರಿಂದ ಉಂಟಾದ ಸಂಚಾರ ದಟ್ಟಣೆಯೇ ವಿದ್ಯಾರ್ಥಿಗಳಿಗೆ ತೊಂದರೆಯಾಗಲು ಕಾರಣ ಎಂದು ಆರೋಪಿಸಿದ್ದಾರೆ.
ಕಾರ್ಯಕ್ರಮದ ಸಮಯವನ್ನು ಬದಲಿಸಿದ್ದರೆ ಈ ಸಮಸ್ಯೆ ಉಂಟಾಗುತ್ತಿರಲಿಲ್ಲ. ವಿದ್ಯಾರ್ಥಿಗಳು ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿ ಪರಿಕ್ಷೆಯಿಂದ ವಂಚಿತರಾಗಿದ್ದಾರೆ. ಮಕ್ಕಳ ಭವಿಷ್ಯ ಹಾಳಾಗಿದೆ ಇದೆಕ್ಕೆಲ್ಲ ಕಾರಣ ಕಾಂಗ್ರೆಸ್ ಪಕ್ಷ ಎಂದು ವಾಗ್ದಾಳಿ ನಡೆಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು, ಭಾನುವಾರ ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದು, ಟ್ರಾಫಿಕ್ ಜಾಮ್ ಸಮಸ್ಯೆ ಎದುರಾಗಬಾರದು ಎಂಬ ಕಾರಣಕ್ಕೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಿಮಾನ ನಿಲ್ದಾಣದಲ್ಲಿಯೇ ಗಂಟೆಗಟ್ಟಲೆ ಕಾದು ಕುಳಿತಿದ್ದರು. ಆದರೆ ಕಾಂಗ್ರೆಸ್ ನಾಯಕರಿಗೆ ಈ ಜ್ಞಾನ ಮತ್ತು ಸಾಮಾನ್ಯ ತಿಳುವಳಿಕೆ ಕೂಡ ಇಲ್ಲ. ವಿದ್ಯಾರ್ಥಿಗಳು ಪರೀಕ್ಷೆಗೆ ಬರುವ ಸಮಯದಲ್ಲಿಯೇ ಕಾರ್ಯಕ್ರಮ ಆಯೋಜಿಸಿ ಸಮಸ್ಯೆ ಮಾಡಿದ್ದಾರೆ. ಈ ಸಮಸ್ಯೆಗೆ ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರವೇ ನೇರ ಹೊಣೆ ಎಂದು ಗುಡುಗಿದರು.