ಕನಕಪುರ: ಕನಕಪುರದ ಪುರಾಣ ಪ್ರಸಿದ್ಧ ಧಾರ್ಮಿಕ ಕೇಂದ್ರಗಳಲ್ಲಿ ಒಂದಾದ ಶ್ರೀ ದೇಗುಲ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಮುಮ್ಮಡಿ ನಿರ್ವಾಣ ಮಹಾಸ್ವಾಮೀಜಿ (84) ಅವರು ಶಿವೈಕ್ಯರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀಗಳನ್ನು ಮೂರು ದಿನಗಳ ಹಿಂದಷ್ಟೇ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಶ್ರೀಗಳು ನಿನ್ನೆ ಸಂಜೆ ಕೊನೆಯುಸಿರೆಳೆದಿದ್ದಾರೆ.
ಧರ್ಮ, ಶಿಕ್ಷಣ ಮತ್ತು ದಾಸೋಹ ಪರಂಪರೆಯನ್ನು ಜಿಲ್ಲೆಯಾದ್ಯಂತ ಬೆಳೆಸಿ, ಲಕ್ಷಾಂತರ ಬಡ ವಿದ್ಯಾರ್ಥಿಗಳಿಗೆ ಆಸರೆಯಾಗಿದ್ದ ಶ್ರೀಗಳ ನಿಧನದ ವಾರ್ತೆ ಕೇಳಿ ರಾಜ್ಯಾದ್ಯಂತ ಭಕ್ತ ಸಮೂಹ ತೀವ್ರ ಆಘಾತ ವ್ಯಕ್ತಪಡಿಸಿದ್ದು, ಮಠದ ಆವರಣದಲ್ಲಿ ಕಣ್ಣೀರಿನ ಮಹಾಪೂರವೇ ಹರಿದಿದೆ.
ಇಂದು ಬೆಳಗ್ಗೆಯಿಂದಲೇ ದೇಗುಲ ಮಠದ ಆವರಣದಲ್ಲಿ ಶ್ರೀಗಳ ಪಾರ್ಥಿವ ಶರೀರವನ್ನು ಸಾರ್ವಜನಿಕರು ಹಾಗೂ ಭಕ್ತಾದಿಗಳ ಅಂತಿಮ ದರ್ಶನಕ್ಕಾಗಿ ಇಡಲಾಗಿದೆ. ಹರ-ಗುರು ಚರಮೂರ್ತಿಗಳು, ವಿವಿಧ ಮಠಾಧೀಶರು ಹಾಗೂ ಸಹಸ್ರಾರು ಭಕ್ತರು ಸರತಿಯ ಸಾಲಿನಲ್ಲಿ ನಿಂತು ಪೂಜ್ಯರ ಅಂತಿಮ ದರ್ಶನ ಪಡೆದು ಭಾವಪೂರ್ಣ ನಮನ ಸಲ್ಲಿಸುತ್ತಿದ್ದಾರೆ.
ಮಠಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ದೇಗುಲ ಮಠದೊಂದಿಗೆ ದಶಕಗಳ ಅವಿನಾಭಾವ ಸಂಬಂಧ ಹೊಂದಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಬೆಳಗ್ಗೆ 10 ಗಂಟೆಗೆ ಕನಕಪುರ ದೇಗುಲ ಮಠಕ್ಕೆ ಖುದ್ದಾಗಿ ಭೇಟಿ ನೀಡಿದ್ದಾರೆ. ಶ್ರೀಗಳ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿದ ಸಿಎಂ, ಪೂಜ್ಯರ ಅಗಲಿಕೆಗೆ ತೀವ್ರ ಸಂತಾಪ ಸೂಚಿಸಿದರು.
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭಾವನಾತ್ಮಕ ಟ್ವೀಟ್
ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಶ್ರೀಗಳ ಅಗಲಿಕೆಗೆ ತೀವ್ರ ದುಃಖ ವ್ಯಕ್ತಪಡಿಸಿ ಎಕ್ಸ್ (ಟ್ವಿಟರ್) ನಲ್ಲಿ ಪೋಸ್ಟ್ ಮಾಡಿದ್ದಾರೆ:
“ಕನಕಪುರದ ಪುರಾಣ ಪ್ರಸಿದ್ಧ ಮಠಗಳಲ್ಲಿ ಒಂದಾದ ಶ್ರೀ ದೇಗುಲ ಮಠದ ಹಿರಿಯ ಪೂಜ್ಯರಾದ ಶ್ರೀ ಶ್ರೀ ಶ್ರೀ ಮುಮ್ಮಡಿ ನಿರ್ವಾಣ ಮಹಾಸ್ವಾಮೀಜಿಗಳವರು ಶಿವೈಕ್ಯರಾದ ವಿಷಯ ತಿಳಿದು ಬಹಳ ದುಃಖವಾಯಿತು. ದೈವ ಸೇವೆಯ ಜತೆಗೆ ಸಮಾಜಮುಖಿ ಕಾರ್ಯಗಳಲ್ಲಿ ಮುಂಚೂಣಿಯಲ್ಲಿದ್ದು ಜನರನ್ನು ಸಾತ್ವಿಕ ಮತ್ತು ಭಕ್ತಿಮಾರ್ಗದಲ್ಲಿ ಮುನ್ನಡೆಸಿದ ಶ್ರೀಗಳ ಅಗಲಿಕೆ ನನಗೆ ಅತೀವ ದುಃಖ ತಂದಿದೆ. ಆ ಪರಮಶಿವನು ಪರಮಪೂಜ್ಯರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಭಕ್ತ ಸಮೂಹಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ.”
ಮುಗಿಲು ಮುಟ್ಟಿದ ಭಕ್ತರ ಆಕ್ರಂದನ
ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ ಅವರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದರು. ಇದರೊಂದಿಗೆ ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ರಾಜ್ಯ ರಾಜಕಾರಣದ ನಾನಾ ಪಕ್ಷಗಳ ಮುಖಂಡರು ಹಾಗೂ ಗಣ್ಯರು ಶ್ರೀಗಳ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.