ಬೀದರ್: ಬೀದರ್ ಜಿಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಗಳು ಶ್ರೀರಾಮನಿಗೆ ಅವಮಾನಿಸಿ ವಿಕೃತಿ ಮೆರೆದಿದ್ದಾರೆ. ಫೇಸ್ಬುಕ್ನಲ್ಲಿ ಶ್ರೀರಾಮ ಹಾಗೂ ಜಗದ್ಗುರು ರೇಣುಕಾಚಾರ್ಯರ ವಿರುದ್ಧ ಅವಹೇಳನಕಾರಿ ಪೋಸ್ಟ್ಗಳನ್ನು ಹಾಕಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಇಂತಹ ಪೋಸ್ಟ್ ಗಳನ್ನು ಪ್ರಕಟಿಸಿ ಸಮಾಜದಲ್ಲಿ ಶಾಂತಿ ಕದಡಲು ಯತ್ನಿಸಿದ ಕಿಡಿಗೇಡಿಗಳ ವಿರುದ್ಧ ಬಸವಕಲ್ಯಾಣ ನಗರ ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ.
ಬಸವಕಲ್ಯಾಣ ನಗರದ ಅಕ್ಕಮಹಾದೇವಿ ಮಹಾವಿದ್ಯಾಲಯದ ಆವರಣದಲ್ಲಿ ನಾಳೆ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶ ಆಯೋಜನೆಗೊಂಡಿದೆ. ಈ ಸಮಾವೇಶಕ್ಕೆ ಕನ್ನೇರಿ ಶ್ರೀಗಳ ಆಗಮನಕ್ಕೆ ಅನುಮತಿ ಲಭ್ಯವಾಗುತ್ತಿದ್ದಂತೆ, ಸಾಮಾಜಿಕ ಜಾಲತಾಣದಲ್ಲಿ ವಿವಾದ ಸೃಷ್ಟಿಸಲಾಗಿದೆ. ‘ಬಸವಪರ ಸಂಘಟನೆಗಳ ಒಕ್ಕೂಟ’ ಎಂಬ ಹೆಸರಿನ ಫೇಸ್ಬುಕ್ ಖಾತೆಯಿಂದ ಶ್ರೀರಾಮ ಹಾಗೂ ರೇಣುಕಾಚಾರ್ಯರನ್ನು ‘ತಾಲಿಬಾನಿಗಳು’ ಎಂದು ನಿಂದಿಸಿ ಅತ್ಯಂತ ಕೀಳುಮಟ್ಟದ ಹಾಗೂ ಪ್ರಚೋದನಕಾರಿ ಪೋಸ್ಟ್ಗಳನ್ನು ಹಾಕಲಾಗಿದೆ.
ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಉದ್ದೇಶಪೂರ್ವಕವಾಗಿ ಸಮಾಜದ ಶಾಂತಿ ಮತ್ತು ಸೌಹಾರ್ದತೆಯನ್ನು ಹಾಳು ಮಾಡಲು ಈ ಹುನ್ನಾರ ನಡೆಸಲಾಗಿದೆ ಎಂದು ಭಕ್ತರು ಆಪಾದಿಸಿದ್ದಾರೆ.
ಶ್ರೀರಾಮನಿಗೆ ಅವಮಾನಿಸಿರುವ ಫೇಸ್ಬುಕ್ ಖಾತೆಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಹಿಂದೂ ಮುಖಂಡ ಕೃಷ್ಣ ಗೋಣೆ ಅವರು ಬಸವಕಲ್ಯಾಣ ನಗರ ಪೊಲೀಸ್ ಠಾಣೆಗೆ ಅಧಿಕೃತವಾಗಿ ದೂರು ನೀಡಿದ್ದಾರೆ.
ಜಗದ್ಗುರು ಬಸವಣ್ಣನವರ ಪವಿತ್ರ ಹೆಸರನ್ನು ದುರುಪಯೋಗಪಡಿಸಿಕೊಂಡು ಹಿಂದೂ ದೇವರುಗಳಿಗೆ ಹಾಗೂ ಧಾರ್ಮಿಕ ಭಾವನೆಗಳಿಗೆ ಅಪಮಾನ ಮಾಡಲಾಗುತ್ತಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಸಮಾವೇಶದ ಹೊತ್ತಿನಲ್ಲಿ ಇಂತಹ ಪ್ರಚೋದನಕಾರಿ ಕೃತ್ಯ ಎಸಗಿರುವ ಕಿಡಿಗೇಡಿಗಳನ್ನು ತಕ್ಷಣವೇ ಪತ್ತೆ ಹಚ್ಚಿ ಬಂಧಿಸಬೇಕು ಎಂದು ಹಿಂದೂ ಸಂಘಟನೆಗಳು ಒತ್ತಾಯಿಸಿವೆ. ಸದ್ಯ ದೂರು ಸ್ವೀಕರಿಸಿರುವ ಬಸವಕಲ್ಯಾಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.