ಬೆಳಗಾವಿ: ಟ್ರಕ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಜಿಲ್ಲೆಯ ಚಿಕ್ಕೋಡಿ-ನಿಪ್ಪಾಣಿ ರಾಜ್ಯ ಹೆದ್ದಾರಿಯ ಚಿಂಚಣಿ ಟೋಲ್ ನಾಕಾ ಬಳಿ ಭೀಕರ ಅಪಘಾತ ಸಂಭವಿಸಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮೃತಪಟ್ಟ ಯುವಕರನ್ನು ಚಿಕ್ಕೋಡಿಯ ಓತಾರಿ ಗಲ್ಲಿಯ ನಿವಾಸಿಗಳಾದ ಸಿದ್ದು ಕುರಳೆ ಮತ್ತು ಸ್ವರೂಪ್ ಮಾಳವದೆ ಎಂದು ಗುರುತಿಸಲಾಗಿದೆ.
ಮೃತ ಯುವಕರು ತಮ್ಮ ಕೆಲಸ ಮುಗಿಸಿಕೊಂಡು ಬೈಕ್ ನಲ್ಲಿ ಮನೆಗೆ ಮರಳುತ್ತಿದ್ದರು. ಚಿಂಚಣಿ ಟೋಲ್ ಗೇಟ್ ತಲುಪುತ್ತಿದ್ದಂತೆ, ಇವರ ಬೈಕ್ ಚಿಕೋಡಿ ಕಡೆಗೆ ಸಾಗುತ್ತಿದ್ದ ಟ್ರಕ್ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಯುವಕರಿಬ್ಬರು ರಸ್ತೆಗೆ ಬಿದ್ದಿದ್ದು, ತಲೆಗೆ ಗಂಭೀರವಾದ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನಾ ಸ್ಥಳಕ್ಕೆ ಸ್ಥಳಿಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.