ಬೆಂಗಳೂರು: ಶಿವಮೊಗ್ಗದ ವೈದ್ಯಕೀಯ ವಿಜ್ಞಾನಗಳ ಮಹಾ ವಿದ್ಯಾಲಯ(ಸಿಮ್ಸ್) ದಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿ ಪ್ರಾಧ್ಯಾಪಕರ ರಕ್ಷಣೆಗೆ ನಿಂತು ಸಂತ್ರಸ್ತರಿಗೆ ನ್ಯಾಯ ದೊರಕಿಸುವಲ್ಲಿ ವಿಫಲರಾದ ಆರೋಪ ಸಂಬಂಧ ವೈದ್ಯಕೀಯ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಮೊಹಮ್ಮದ್ ಮೋಹ್ಸಿನ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆಗೆ ಹೈಕೋರ್ಟ್ಸೂಚನೆ ನೀಡಿದೆ.
ಅಷ್ಟೇ ಅಲ್ಲ ಸಿಮ್ಸ್ ನಿರ್ದೇಶಕರಾಗಿದ್ದ ಡಾ.ವಿರುಪಾಕ್ಷಪ್ಪ ವಿರುದ್ಧ ತಕ್ಷಣ ಇಲಾಖಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ ಸಹಾಯಕ ಪ್ರಾಧ್ಯಾಪಕ ಡಾ. ಆಶ್ವಿನ್ ಹೆಬ್ಬಾರ್ ಕೆ ಅವರ ವರ್ಗಾವಣೆ ಆದೇಶಕ್ಕೆ ತಡೆ ನೀಡಿದ್ದ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸಿಮ್ಸ್ ಮತ್ತು ತಮ್ಮನ್ನು ವರ್ಗಾವಣೆ ಮಾಡಿದ ಕ್ರಮ ಪ್ರಶ್ನಿಸಿ ಆರೋಪಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗಳನ್ನು ಜಂಟಿಯಾಗಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಿ.ಕೆ. ಸಿಂಗ್ ಹಾಗೂ ನ್ಯಾಯಮೂರ್ತಿ ಟಿ.ಎಂ. ನದಾಫ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.
ಪ್ರಕರಣ ಸಂಬಂಧದ ದಾಖಲೆಗಳನ್ನು ಪರಿಶೀಲಿಸಿದ ನ್ಯಾಯಪೀಠ, ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕರು ಹಾಗೂ ಪ್ರಧಾನ ಕಾರ್ಯದರ್ಶಿಗಳು ವಿದ್ಯಾರ್ಥಿಗಳು ಅನುಭವಿಸಿದ ಕಿರುಕುಳ ಮತ್ತು ಲೈಂಗಿಕ ದೌರ್ಜನ್ಯದ ಬಗ್ಗೆ ಸಂಪೂರ್ಣ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಅಂಶ ಗೊತ್ತಾಗಲಿದೆ. ವಿದ್ಯಾರ್ಥಿನಿಗಳು ದೌರ್ಜನ್ಯ ಮತ್ತು ಕಿರುಕುಳ ಆರೋಪ ಎದುರಿಸುತ್ತಿರುವ ಆರೋಪಿಯನ್ನು ರಕ್ಷಣೆ ಮಾಡುವ ಮೂಲಕ ಘೋರ ದುಷ್ಕೃತ್ಯ ವೆಸಗಿದ್ದಾರೆ.
ಆರೋಪಿ ವಿರುದ್ಧ ಇಬ್ಬರು ವಿದ್ಯಾರ್ಥಿನಿಗಳು ಮಾತ್ರ ದೂರು ನೀಡಿದ್ದು, ಹಲವು ವಿದ್ಯಾರ್ಥಿನಿಗಳು ದೌರ್ಜನ್ಯಕ್ಕೆ ಸಿಲುಕಿದ್ದು, ದೂರು ನೀಡದೆ ಇದ್ದಿರಬಹುದು. ಲೈಂಗಿಕ ಕಿರುಕುಳದಂತಹ ಗಂಭೀರ ಪ್ರಕರಣಗಳಲ್ಲಿ ತಪ್ಪಿತಸ್ಥರ ಬಗ್ಗೆ ತೋರಿಸುವ ಮೃದು ಧೋರಣೆ ಅಥವಾ ಅನಗತ್ಯ ಸಹಾನುಭೂತಿಯು ಕೆಲಸ ಮಾಡುವ ಮಹಿಳೆಯರು ಮತ್ತು ವಿದ್ಯಾರ್ಥಿನಿಯರ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂದು ಪೀಠ ಹೇಳಿದೆ.
ಡಾ.ಅಶ್ವಿನ್ ಹೆಬ್ಬಾರ್ ಅವರು ಬಿಳಿ ಕೋಟು ಧರಿಸಿರುವ ನರಿಯಂತಿದ್ದು, ಅವರ ವಿರುದ್ಧ ಬಾಕಿಯಿರುವ ಶಿಸ್ತು ಕ್ರಮವನ್ನು ಶೀಘ್ರದಲ್ಲಿ ಕೈಗೊಳ್ಳಬೇಕು. ಈ ಸಂಬಂಧ ರಾಷ್ಟ್ರೀಯ ವೈದ್ಯಕೀಯ ಆಯೋಗ ಕ್ರಮ ಕೈಗೊಂಡು ಅವರು ತಪ್ಪಿತಸ್ಥರು ಎಂದು ಕಂಡು ಬಂದಲ್ಲಿ ಅವರ ವೈದ್ಯಕೀಯ ಪರವಾನಿಗೆಯನ್ನು ರದ್ದುಗೊಳಿಸಬೇಕು ಎಂದು ತಿಳಿಸಿದೆ.
ಆರೋಪಿ ಡಾ.ಅಶ್ವಿನ್ ಹೆಬ್ಬಾರ್ ಅವರನ್ನು ಅಮಾನತು ಆದೇಶ ರದ್ದುಪಡಿಸಿದ್ದ ಏಕ ಸದಸ್ಯ ಪೀಠದ ಆದೇಶವನ್ನು ರದ್ದುಗೊಳಿಸಿದ್ದು, ಈ ಆದೇಶದಿಂದ ಆರೋಪಿಯ ಅಮಾನತ್ತು ಮುಂದುವರೆಯಲಿದೆ.
ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡಿ-ಯೂನಿಟ್ ನ ಮುಖ್ಯಸ್ಥರಾಗಿದ್ದ ಡಾ. ಅಶ್ವಿನ್ ಹೆಬ್ಬಾರ್, ಆದೇ ಸಂಸ್ಥೆಯಲ್ಲಿ ವೈದ್ಯರಾಗಿದ್ದ ಸಂತ್ರಸ್ತೆಗೆ 2022ರ ಜುಲೈ 13ರಂದು ಎದೆಯನ್ನು ಮುಟ್ಟಿ, ಲೈಂಗಿಕ ದೌರ್ಜನ್ಯ ನಡೆಸಿದ್ದರು. ಈ ಸಂಬಂಧ ಸಂತ್ರಸ್ತೆ ಸಂಸ್ಥೆಯ ವೈದ್ಯಕೀಯ ಶಸ್ತ್ರ ಚಿಕಿತ್ಸಕರಿಗೆ ದೂರು ನೀಡಿದ್ದರು. ಆದರೆ, ಯಾವುದೇ ಕ್ರಮಕ್ಕೆ ಮುಂದಾಗದ ಹಿನ್ನೆಲೆಯಲ್ಲಿ ಶಿವಮೊಗ್ಗದ ಮಹಿಳಾ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು.
ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿದ್ದ ಆರೋಪಿ, ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಈ ನಡುವೆ ಅವರನ್ನು ಅಮಾನತುಗೊಳಿಸಿ ಆದೇಶಿಸಲಾಗಿತ್ತು. ಇದನ್ನು ಪ್ರಶ್ನಿಸಿ ಆರೋಪಿ ಹೈಕೋರ್ಟ್ ಮೆಟ್ಟಿಲೇರಿದ್ದು, ಆದೇಶಕ್ಕೆ ತಡೆಯಾಜ್ಞೆ ನೀಡಿ ಆದೇಶಿಸಿತ್ತು. ಇದರಿಂದಾಗಿ ಅವರ ಸೇವೆಯನ್ನು ಮತ್ತೆ ಮುಂದುವರೆಸಲಾಗಿತ್ತು. ಘಟನೆ ಸಂಬಂಧ ಆಂತರಿಕ ದೂರು ಸಮಿತಿ ರಚನೆ ಮಾಡಿ, ವಿಚಾರಣೆಗೊಳಪಡಿಸಿತ್ತು, ಅಲ್ಲದೇ, ಮುಂದಿನ ದಿನಗಳಲ್ಲಿ ಈರೀತಿಯ ಯಾವುದೇ ಘಟನೆ ನಡೆಯದಂತೆ ಎಚ್ಚರಿಕೆ ನೀಡಿತ್ತು. ಜತೆಗೆ, ಸಂತ್ರಸ್ತೆಯಿಂದ ದೂರು ಹಿಂಪಡೆಯುವಂತೆ ಸೂಚನೆ ನೀಡಲಾಗಿತ್ತು. ಈ ನಡುವೆ ಆರೋಪಿ ಅಶ್ವಿನ್ ಅವರ ಅಮಾನತ್ತು ಆದೇಶವನ್ನು ರದ್ದುಗೊಳಿಸಿ ಹೈಕೋರ್ಟ್ನ ಮತ್ತೊಂದು ಪೀಠ ಆದೇಶಿಸಿತ್ತು.
ಈ ನಡುವೆ ಸ್ನಾತಕೋತ್ತರ ವಿದ್ಯಾರ್ಥಿಯೊಬ್ಬರ ಸ್ನಾತಕ ಪದವಿ ಪೂರ್ಣಗೊಂಡ ಸಂದರ್ಭದಲ್ಲಿ 2025ರ ಜೂನ್ 14ರಂದು ಖಾಸಗಿ ಹೋಟೆಲ್ನಲ್ಲಿ ನಡೆದ ಔತಣಕೂಟದ ವೇಳೆ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಗೆ ಊಟದ ಮೇಜಿನ ಬಳಿ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿರುವುದಾಗಿ ಆಂತರಿಕ ದೂರು ದಾಖಲಾಗಿತ್ತು. ಈ ಅಂಶ ಸಮಿತಿ ನಡೆಸಿದ ತನಿಖೆಯಲ್ಲಿ ಆರೋಪ ಸಾಬೀತಾಗಿತ್ತು. ಈ ಗಂಭೀರ ಪ್ರಕರಣದ ತನಿಖೆ ನಡೆಯುತ್ತಿರುವಾಗಲೇ, ಪ್ರಭಾವಿ ವ್ಯಕ್ತಿಗಳ ಒತ್ತಡಕ್ಕೆ ಮಣಿದು ಸಂಸ್ಥೆಯ ನಿರ್ದೇಶಕರು ಮತ್ತು ಪ್ರಧಾನ ಕಾರ್ಯದರ್ಶಿಗಳು ಡಾ. ಅಶ್ವಿನ್ ಹೆಬ್ಬಾರ್ ಅವರ ಅಮಾನತು ಆದೇಶ ಹಿಂಪಡೆದು ಅವರನ್ನು ಹಾವೇರಿ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ತಾತ್ಕಾಲಿಕವಾಗಿ ವರ್ಗಾವಣೆ ಮಾಡಿದ್ದರು.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೋಪಿ ಡಾ.ಅಶ್ವಿನ್ ಅವರನ್ನು ಅಮಾನತು ಮಾಡಬೇಕು ಎಂದು ಕೋರಿ ವೈದ್ಯಕೀಯ ಶಿಕ್ಷಣ ಇಲಾಖೆ ಪ್ರದಾನ ಕಾರ್ಯದರ್ಶಿಗೆ ಕೋರಲಾಗಿತ್ತು. ಜತೆಗೆ, ಅಮಾನತು ಮಾಡದಿದ್ದಲ್ಲಿ ಅವರ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಸ್ನಾತಕೋತ್ತರ ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದ್ದರು.
ಇದರಿಂದ ಆರೋಪಿ ಅಶ್ವಿನ್ ಹೆಬ್ಬಾರ್ ಅವರನ್ನು ಅಮಾನತು ಮಾಡಲಾಗಿತ್ತು. ಇದಾದ 15 ದಿನಗಳಲ್ಲಿ ಅವರ ಅಮಾನತು ಆದೇಶವನ್ನು ರದ್ದುಪಡಿದು, ಹಾವೇರಿಯ ವೈದ್ಯಕೀಯ ಶಿಕ್ಷಣ ಮಹಾಸಂಸ್ಥೆಗೆ ವರ್ಗಾವಣೆ ಮಾಡಲಾಗಿತ್ತು. ಆದರೆ, ಈ ವರ್ಗಾವಣೆ ಆದೇಶ ಪ್ರಶ್ನಿಸಿ ಹೈಕೋರ್ಟ್ಗೆ ಮತ್ತೊಂದು ಅರ್ಜಿ ಸಲ್ಲಿಸಿದ್ದು, ಈ ಆದೇಶಕ್ಕೆ ಹೈಕೋರ್ಟ್ನ ಏಕ ಸದಸ್ಯ ಪೀಠ ತಡೆ ನೀಡಿ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಮಹಾ ಸಂಸ್ಥೆ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು.