ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲ್ಲೂಕಿನ ಕೆಂಪಯ್ಯನ ಹುಂಡಿಯಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಮದುವೆಗೆ ಸಿದ್ಧತೆಗಳು ನಡೆಯುತ್ತಿದ್ದ ಕುಟುಂಬದಲ್ಲಿ ತಂದೆ, ತಾಯಿ ಹಾಗೂ ಮಗಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಹೌದು. ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲ್ಲೂಕಿನ ಕೆಂಪಯ್ಯನ ಹುಂಡಿಯಲ್ಲಿ ಮದುವೆಗೆ ಒಂದು ದಿನ ಬಾಕಿ ಇರುವಾಗಲೇ ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಮೃತ ಯುವತಿಗೆ ಮಾಜಿ ಪರಿಚಿತನಿಂದ ನಿರಂತರ ಕಿರುಕುಳ ಹಾಗೂ ಬೆದರಿಕೆ ಎದುರಾಗಿದ್ದ ಹಿನ್ನೆಲೆಯಲ್ಲಿ ತಂದೆ, ತಾಯಿ ಮತ್ತು ಮಗಳು ಈ ಕಠಿಣ ನಿರ್ಧಾರಕ್ಕೆ ಶರಣಾಗಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿರುವುದರಿಂದ ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ.
ಏನಿದು ಘಟನೆ
ಮೃತರನ್ನು ಶಿವಣ್ಣ, ನಾಗರತ್ನ ಹಾಗೂ ಅವರ ಪುತ್ರಿ ರಕ್ಷಿತಾ ಎಂದು ಗುರುತಿಸಲಾಗಿದೆ. ರಕ್ಷಿತಾಳ ಮದುವೆ ನಾಳೆ ನಡೆಯಬೇಕಿದ್ದು, ಈ ಹಿನ್ನೆಲೆಯಲ್ಲಿ ಕುಟುಂಬದಲ್ಲಿ ಸಂಭ್ರಮದ ವಾತಾವರಣ ಇತ್ತು. ಆದರೆ ಮದುವೆಗೆ ಮುನ್ನವೇ ಈ ದುರಂತ ಸಂಭವಿಸಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ರಕ್ಷಿತಾಳಿಗೆ ಈ ಹಿಂದೆ ಪರಿಚಯವಿದ್ದ ಉಲ್ಲಾಸ್ ಗೌಡ ಎಂಬಾತ ಮದುವೆ ವಿಚಾರವಾಗಿ ನಿರಂತರ ಕಿರುಕುಳ ನೀಡುತ್ತಿದ್ದನೆಂದು ಆರೋಪಿಸಲಾಗಿದೆ. ರಕ್ಷಿತಾಳ ನಿಶ್ಚಿತಾರ್ಥ ಆಗಿದ್ದ ಯುವಕನಿಗೆ ಉಲ್ಲಾಸ್ ಸಂದೇಶಗಳನ್ನು ಕಳುಹಿಸಿ, “ನಾನು ರಕ್ಷಿತಾಳನ್ನು ಮದುವೆಯಾಗಬೇಕಿತ್ತು, ಆಕೆ ಬೇರೆ ವ್ಯಕ್ತಿಯನ್ನು ಹೇಗೆ ಮದುವೆಯಾಗುತ್ತಾಳೆ” ಎಂದು ಪ್ರಶ್ನಿಸುತ್ತಿದ್ದನೆನ್ನಲಾಗಿದೆ.
ಅಷ್ಟೇ ಅಲ್ಲದೆ, ಮದುವೆ ಮಂಟಪಕ್ಕೆ ಬಂದು ಮದುವೆ ನಿಲ್ಲಿಸುವುದಾಗಿ ಬೆದರಿಕೆ ಹಾಕಿದ್ದಾನೆ ಎಂಬ ಆರೋಪವೂ ಕೇಳಿಬಂದಿದೆ. ರಕ್ಷಿತಾಳ ಫೋಟೋಗಳು ಹಾಗೂ ಹಳೆಯ ಸಂದೇಶಗಳನ್ನು ಬಳಸಿಕೊಂಡು ಮಾನಸಿಕ ಕಿರುಕುಳ ನೀಡುತ್ತಿದ್ದನೆಂದು ಕುಟುಂಬದವರು ಡೆತ್ ನೋಟ್ನಲ್ಲಿ ಉಲ್ಲೇಖಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಘಟನಾ ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಪೊಲೀಸರು ಅದನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದರ ಬಗ್ಗೆ ತನಿಖೆ ಮುಂದುವರಿದಿದೆ. ಆರೋಪಿ ಉಲ್ಲಾಸ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.ಈ ಘಟನೆ ಇಡೀ ಗ್ರಾಮವನ್ನು ಬೆಚ್ಚಿಬೀಳಿಸಿದ್ದು, ಮದುವೆಯ ಸಂಭ್ರಮದಲ್ಲಿರಬೇಕಿದ್ದ ಕುಟುಂಬದ ಅಂತ್ಯ ಕಂಡು ಸ್ಥಳೀಯರು ಕಂಬನಿ ಮಿಡಿದಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.