ಬೆಂಗಳೂರು: ಸಿಐಡಿ ಇನ್ಸ್ ಪೆಕ್ಟರ್ ಓರ್ವರು ಗ್ಯಾಂಗ್ ಕಟ್ಟಿಕೊಂಡು ಬಂದು ಬರೋಬ್ಬರಿ 20 ಲಕ್ಷ ರೂಪಾಯಿ ಹಣ ದೋಚಿ ಎಸ್ಕೇಪ್ ಆಗಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.
ಸಿಐಡಿ ವಿಭಾಗದ ಇನ್ಸ್ಪೆಕ್ಟರ್ ಮಹೇಶ್ ಕನಕಗಿರಿ ಸ್ವತಃ ತಾವೇ ಗ್ಯಾಂಗ್ ಕಟ್ಟಿಕೊಂಡು, ಮಡಿವಾಳದ ಖಾಸಗಿ ಹೋಟೆಲ್ನಲ್ಲಿ ತಂಗಿದ್ದ ಕೇರಳ ಮೂಲದ ವ್ಯಕ್ತಿಗಳನ್ನು ಬೆದರಿಸಿ ಬರೋಬ್ಬರಿ 20 ಲಕ್ಷ ರೂಪಾಯಿ ದರೋಡೆ ಮಾಡಿದ್ದಾರೆ. ಈ ಘಟನೆ ಇಡೀ ಬೆಂಗಳೂರನ್ನೇ ಬೆಚ್ಚಿ ಬೀಳಿಸಿದೆ. ಕಳ್ಳರನ್ನು ಹಿಡಿಯಬೇಕಾದ ಪೊಲೀಸ್ ಅಧಿಕಾರಿಯೇ ಗ್ಯಾಂಗ್ ಕಟ್ಟಿಕೊಂಡು ದರೋಡೆ ಮಾಡಿರುವುದು ಆತಂಕಕಾರಿ ಬೆಳವಣಿಗೆ.
ಕೇರಳ ಮೂಲದ ಉದ್ಯಮಿಗಳು ವ್ಯಾಪಾರದ ಉದ್ದೇಶಕ್ಕಾಗಿ ಹಣದ ಸಮೇತ ಮಡಿವಾಳದ ಖಾಸಗಿ ಹೋಟೆಲ್ನಲ್ಲಿ ವಾಸ್ತವ್ಯ ಹೂಡಿದ್ದರು. ಈ ಬಗ್ಗೆ ನಿಖರ ಮಾಹಿತಿ ಪಡೆದಿದ್ದ ಇನ್ಸ್ಪೆಕ್ಟರ್ ಮಹೇಶ್ ಕನಕಗಿರಿ, ಹ್ಯಾರಿಸ್, ಕುಪೇಂದ್ರ, ಶಪಿ ಮತ್ತು ಶಾನಿ ಎಂಬ ನಾಲ್ವರೊಂದಿಗೆ ಸೇರಿ ದರೋಡೆಗೆ ಪ್ಲಾನ್ ಮಾಡಿದ್ದಾರೆ.
ಪ್ಲಾನ್ ನಂತೆ ಹೋಟೆಲ್ ಮುಂಭಾಗ ಅಧಿಕೃತ ಸಿಐಡಿ ಪೊಲೀಸ್ ಜೀಪ್ ನಿಲ್ಲಿಸಿ ಇನ್ಸ್ಪೆಕ್ಟರ್ ಒಳಗೇ ಕುಳಿತಿದ್ದರು. ಅವರ ಗ್ಯಾಂಗ್ನ ಇಬ್ಬರು ಹೋಟೆಲ್ ಕೋಣೆಗೆ ನುಗ್ಗಿ, ತಾವು ಪೊಲೀಸರೆಂದು ಇನ್ಸ್ಪೆಕ್ಟರ್ ಅವರ ಅಧಿಕೃತ ಗುರುತಿನ ಚೀಟಿ ತೋರಿಸಿ, ಅಕ್ರಮವಾಗಿ ಟ್ರೇಡಿಂಗ್ ಮಾಡಲು ಹಣ ತಂದಿದ್ದೀರಿ ಎಂದು ಉದ್ಯಮಿಗಳನ್ನು ಬೆದರಿಸಿದ್ದಾರೆ. ಬಳಿಕ ಅವರಿಂದ 20 ಲಕ್ಷ ರೂಪಾಯಿ ನಗದನ್ನು ಕಸಿದುಕೊಂಡು, ಕಾಲ್ಕಿತ್ತುದ್ದು, ಹೋಟೆಲ್ ಹೊರಗೆ ನಿಂತಿದ್ದ ಪೊಲೀಸ್ ಜೀಪ್ನಲ್ಲೇ ಇಡೀ ಗ್ಯಾಂಗ್ ಎಸ್ಕೇಪ್ ಆಗಿದೆ.
ಉದ್ಯಮಿಗಳು ತಕ್ಷಣವೇ ಅವರು ಮಡಿವಾಳ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ಪ್ರಕರಣದ ಗಾಂಭೀರ್ಯತೆ ಅರಿತು ತನಿಖೆಗೆ ಇಳಿದ ಮಡಿವಾಳ ಪೊಲೀಸರು, ರಾತ್ರೋರಾತ್ರಿ ಕಾರ್ಯಾಚರಣೆ ನಡೆಸಿ ದರೋಡೆ ಗ್ಯಾಂಗ್ನಲ್ಲಿದ್ದ ಕುಪೇಂದ್ರ ಎಂಬಾತನನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯ ವಿಚಾರಣೆ ನಡೆಸಿದಾಗ ಇಡೀ ದರೋಡೆ ಪ್ರಕರಣದ ಮಾಸ್ಟರ್ ಮೈಂಡ್ ಸಿಐಡಿ ಇನ್ಸ್ಪೆಕ್ಟರ್ ಮಹೇಶ್ ಕನಕಗಿರಿ ಎಂಬ ಆಘಾತಕಾರಿ ಸತ್ಯ ಬಯಲಾಗಿದೆ. ಕುಪೇಂದ್ರ ಬಂಧನವಾಗುತ್ತಿದ್ದಂತೆಯೇ ಇನ್ಸ್ಪೆಕ್ಟರ್ ಮಹೇಶ್ ಕನಕಗಿರಿ ಹಾಗೂ ಉಳಿದ ಮೂವರು ಆರೋಪಿಗಳು ನಾಪತ್ತೆಯಾಗಿದ್ದಾರೆ.
ಸದ್ಯ ಪೊಲೀಸರು ಆರೋಪಿ ಕುಪೇಂದ್ರ ಮತ್ತು ದರೋಡೆಗೆ ಬಳಸಲಾಗಿದ್ದ ಸಿಐಡಿ ಜೀಪನ್ನು ಜಪ್ತಿ ಮಾಡಿದ್ದು, ತಲೆಮರೆಸಿಕೊಂಡಿರುವ ಇತರ ಪೊಲೀಸ್ ಅಧಿಕಾರಿ ಹಾಗೂ ಇತರ ನಾಲ್ವರಿಗಾಗಿ ಹುಡುಕಾಟ ನಡೆಸಿದ್ದಾರೆ.